×
Ad

Afzalpur | ವಿದ್ಯುತ್ ತಂತಿ ತಗುಲಿ ರೈತ ಮೃತ್ಯು : ಲೈನ್‌ಮ್ಯಾನ್ ನಿರ್ಲಕ್ಷ್ಯ ಆರೋಪಿಸಿ ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ

Update: 2026-06-26 22:50 IST

ಅಫಜಲಪುರ: ತಾಲೂಕಿನ ಅಳ್ಳಗಿ (ಕೆ) ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದ್ದು, ಈ ಪ್ರಕರಣದಲ್ಲಿ ಲೈನ್‌ಮ್ಯಾನ್ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಕಲಬುರಗಿ–ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ರೈತನನ್ನು ಬಸಪ್ಪ ಮಹದೇವಪ್ಪ ಪೂಜಾರಿ (42) ಎಂದು ಗುರುತಿಸಲಾಗಿದೆ. ಅವರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

ಲಭ್ಯ ಮಾಹಿತಿಯ ಪ್ರಕಾರ, ಶುಕ್ರವಾರ ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ಗ್ರಾಮದ ಲೈನ್‌ಮ್ಯಾನ್ ಗುಂಡುಜಿ ಚವ್ಹಾಣ ಅವರ ಸೂಚನೆಯ ಮೇರೆಗೆ ಬಸಪ್ಪ ಪೂಜಾರಿ ವಿದ್ಯುತ್ ಕಂಬ ಹತ್ತಿದ್ದರು ಎನ್ನಲಾಗಿದೆ. ಈ ವೇಳೆ ವಿದ್ಯುತ್ ಸರಬರಾಜನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತೇ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಂಬ ಹತ್ತಿದ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ತಂತಿ ತಗುಲಿ ಬಸಪ್ಪ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ತಕ್ಷಣ ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ಗ್ರಾಮದಲ್ಲಿ ಆಕ್ರೋಶದ ವಾತಾವರಣ ನಿರ್ಮಾಣವಾಗಿದ್ದು, ಲೈನ್‌ಮ್ಯಾನ್ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯವೇ ರೈತನ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ರಸ್ತೆ ತಡೆದು ಪ್ರತಿಭಟನೆ ನಡೆಸಿದ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯುತ್ ಇಲಾಖೆಯ ನಿಯಮಾನುಸಾರ ಯಾವುದೇ ವ್ಯಕ್ತಿಯನ್ನು ವಿದ್ಯುತ್ ಕಂಬ ಹತ್ತಿಸುವ ಮುನ್ನ ವಿದ್ಯುತ್ ಸರಬರಾಜನ್ನು ಸಂಪೂರ್ಣ ಸ್ಥಗಿತಗೊಳಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ಈ ಪ್ರಕರಣದಲ್ಲಿ ಆ ನಿಯಮಗಳನ್ನು ಪಾಲಿಸಲಾಗಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ.

ಘಟನೆ ಕುರಿತು ಪೊಲೀಸರು ಹಾಗೂ ವಿದ್ಯುತ್ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿರ್ಲಕ್ಷ್ಯ ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News