Afzalpur | ಹಡಪದ ಅಪ್ಪಣ್ಣನವರ ತತ್ವಗಳು ಇಂದಿಗೂ ಪ್ರಸ್ತುತ: ಅರುಣಕುಮಾರ ಪಾಟೀಲ
ಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಅಫಜಲಪುರ: ಶರಣ ಹಡಪದ ಅಪ್ಪಣ್ಣನವರು ಬಸವ ತತ್ವ, ಕಾಯಕ ಹಾಗೂ ಸಮಾನತೆಯ ಸಂದೇಶವನ್ನು ಸಮಾಜಕ್ಕೆ ಸಾರಿದ ಮಹಾನ್ ಕಾಯಕ ಶರಣರಾಗಿದ್ದು, ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಪ್ರತಿಯೊಬ್ಬರೂ ಅವರ ತತ್ವ ಮತ್ತು ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಪಾಟೀಲ ಹೇಳಿದರು.
ತಾಲೂಕು ಆಡಳಿತದ ವತಿಯಿಂದ ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಶರಣ ಹಡಪದ ಅಪ್ಪಣ್ಣನವರು ಬಸವಣ್ಣನವರ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸಮಾನತೆ, ಕಾಯಕ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ್ದರು. ಅವರ ಆದರ್ಶಗಳು ಇಂದಿನ ಪೀಳಿಗೆಗೆ ಮಾರ್ಗದರ್ಶನವಾಗಿದ್ದು, ಸಮಾಜದಲ್ಲಿ ಸೌಹಾರ್ದತೆ ಮತ್ತು ಸಮಾನತೆಯನ್ನು ಬೆಳೆಸಲು ಎಲ್ಲರೂ ಅವರ ತತ್ವಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಜೀವಕುಮಾರ ದಾಸರ, ರೈತ ಹೋರಾಟಗಾರ ಶ್ರೀಮಂತ ಬಿರಾದಾರ, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಬಸವರಾಜ ಚಾಂದಕವಟೆ, ರೈತ ಮುಖಂಡ ಗುರು ಚಾಂದಕವಟೆ, ತಾಲೂಕು ಬಣಜಿಗ ಸಮುದಾಯದ ಅಧ್ಯಕ್ಷ ಬಸಣ್ಣ ಗುಣಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರಭಾವತಿ ಮೇತ್ರಿ ಅವರು ಶರಣ ಹಡಪದ ಅಪ್ಪಣ್ಣನವರ ಜೀವನ, ತತ್ವ ಹಾಗೂ ಸಮಾಜ ಸುಧಾರಣೆಯ ಕಾರ್ಯಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಡಪದ ಸಮಾಜದ ತಾಲೂಕು ಅಧ್ಯಕ್ಷ ಮಹಾಂತೇಶ ಹಡಪದ, ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.