Aland | ಯಳಸಂಗಿ ಗ್ರಾಮದಲ್ಲಿ ಸಂಭ್ರಮದಿಂದ ಕಾರಹುಣ್ಣಿಮೆ ಆಚರಣೆ
ಆಳಂದ: ತಾಲೂಕಿನ ಯಳಸಂಗಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಕಾರಹುಣ್ಣಿಮೆ ಹಬ್ಬವನ್ನು ರೈತರು ಸಾಂಪ್ರದಾಯಿಕವಾಗಿ ಹಾಗೂ ಸಂಭ್ರಮದಿಂದ ಆಚರಿಸಿದರು.
ವರ್ಷವಿಡೀ ಕೃಷಿ ಚಟುವಟಿಕೆಗಳಲ್ಲಿ ತಮ್ಮೊಂದಿಗೆ ಶ್ರಮಿಸುವ ಎತ್ತುಗಳನ್ನು ಸ್ವಚ್ಛಗೊಳಿಸಿ, ಬಣ್ಣಬಣ್ಣದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ರೈತರು ಜಾನುವಾರುಗಳ ಮೇಲಿನ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
ಬೆಳಗ್ಗೆಯಿಂದಲೇ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ, ಕೊಂಬುಗಳಿಗೆ ಬಣ್ಣ ಹಚ್ಚಿ, ಹೂವಿನ ಹಾರಗಳು ಹಾಗೂ ವಿವಿಧ ಅಲಂಕಾರಿಕ ವಸ್ತುಗಳಿಂದ ಸಿಂಗರಿಸಿದರು. ಬಳಿಕ ಅಲಂಕೃತ ಎತ್ತುಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ರೈತರು ಕುಟುಂಬ ಸಮೇತರಾಗಿ ಭಾಗವಹಿಸಿದ್ದು, ಅದನ್ನು ವೀಕ್ಷಿಸಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಹಬ್ಬದ ಸಂಭ್ರಮದಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು.
ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದಿರುವುದು ರೈತರಲ್ಲಿ ಆತಂಕ ಮೂಡಿಸಿದ್ದರೂ, ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆಗಾಗಿ ರೈತರು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಹಬ್ಬದ ಅಂಗವಾಗಿ ಮನೆಗಳಲ್ಲಿ ಹೋಳಿಗೆ, ಹಪ್ಪಳ ಸೇರಿದಂತೆ ವಿವಿಧ ಸಾಂಪ್ರದಾಯಿಕ ತಿನಿಸುಗಳನ್ನು ತಯಾರಿಸಿ, ಕುಟುಂಬ ಸದಸ್ಯರು, ಬಂಧು-ಬಳಗ ಹಾಗೂ ನೆರೆಹೊರೆಯವರೊಂದಿಗೆ ಹಂಚಿಕೊಂಡು ಕಾರಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಮಂಜುನಾಥ ಅಕ್ಕಲಕೋಟ, ಚಂದ್ರಶೇಖರ್ ಕೇವಂಟಗಿ, ಅನಿಲ್ ಗೌಡ ಪಾಟೀಲ್, ಗುರುನಾಥ ಕುಂಬಾರ, ಲಕ್ಷ್ಮೀಪುತ್ರ ತಳವಾರ, ಶ್ರೀಶೈಲ ಬುಳ್ಳಾ, ಸುಲ್ತಾನ್ ಮುಜವಾರ, ಅನವೀರಯ್ಯ ಮಠಪತಿ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.