×
Ad

Aland | ವಿದ್ಯುತ್ ಖಾಸಗೀಕರಣ ವಿರೋಧಿಸಿ ಕಿಸಾನ್ ಸಭಾ ಪ್ರತಿಭಟನೆ

Update: 2026-06-26 20:21 IST

ಆಳಂದ: ಜನವಿರೋಧಿ ವಿದ್ಯುತ್ ಖಾಸಗೀಕರಣ ನೀತಿಯನ್ನು ತಕ್ಷಣ ಹಿಂಪಡೆಯಬೇಕು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಬರಗಾಲ ಘೋಷಣೆ ಮಾಡಬೇಕು ಹಾಗೂ ಅಸಂಘಟಿತ ಕೃಷಿ ಕೂಲಿ ಕಾರ್ಮಿಕರು ಮತ್ತು ದಿನಗೂಲಿ ನೌಕರರ ವೇತನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಹಾಗೂ ಭಾರತೀಯ ಕ್ಷೇತ್ರ ಮಜದೂರ ಯೂನಿಯನ್ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು, ಬಳಿಕ ತಹಸೀಲ್ದಾರ್ ಅಣ್ಣಾರಾವ್ ಪಾಟೀಲ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷ ಭೀಮಶಂಕರ ಮಾಡಿಯಾಳ, ವಿದ್ಯುತ್ ಖಾಸಗೀಕರಣದಿಂದ ಜನಸಾಮಾನ್ಯರು ಮತ್ತು ರೈತರು ಹೆಚ್ಚಿನ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈಗಾಗಲೇ ಬೆಳೆ ನಷ್ಟ, ಸಾಲದ ಹೊರೆ ಮತ್ತು ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ವಿದ್ಯುತ್ ಖಾಸಗೀಕರಣ ಜಾರಿಯಾದರೆ ಅವರ ಮೇಲಿನ ಹೊರೆ ಮತ್ತಷ್ಟು ಹೆಚ್ಚಲಿದೆ ಎಂದು ಅವರು ಹೇಳಿದರು.

ಕಳೆದ ವರ್ಷ ಅತಿವೃಷ್ಟಿ ಹಾಗೂ ಈ ವರ್ಷ ಮಳೆಯ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ತಕ್ಷಣ ಬರಗಾಲ ಘೋಷಿಸಿ, ರೈತರ ಬ್ಯಾಂಕ್ ಸಾಲ ಮನ್ನಾ ಮಾಡುವುದರ ಜೊತೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ಬಿಲ್ ಪಾವತಿಸಲು ಸಹ ರೈತರು ಪರದಾಡುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಖಾಸಗೀಕರಣ ಜಾರಿಗೆ ತರುವುದು ರೈತ ವಿರೋಧಿ ಕ್ರಮವಾಗಿದ್ದು, ಅದನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ಮನವಿಯಲ್ಲಿ ವಿದ್ಯುತ್ ಖಾಸಗೀಕರಣವನ್ನು ಹಿಂಪಡೆಯುವುದು, 2025-26ನೇ ಸಾಲಿನ ರೈತರ ಬೆಳೆ ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡುವುದು ಹಾಗೂ ಅಸಂಘಟಿತ ಕೃಷಿ ಕೂಲಿ ಕಾರ್ಮಿಕರು ಮತ್ತು ದಿನಗೂಲಿ ನೌಕರರ ವೇತನವನ್ನು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಲಾಗಿದೆ.

ಇದೇ ವೇಳೆ, ಆಳಂದ ತಾಲೂಕಿನ ಜಲ್ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದರೂ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಕಾಮಗಾರಿಗಳ ಗುಣಮಟ್ಟದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕಳೆದ ಎರಡು ತಿಂಗಳಿನಿಂದ ಸತ್ಯಾಗ್ರಹ ನಡೆಸಿದರೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಬೇಡಿಕೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕಿಸಾನ್ ಸಭಾ ತಾಲೂಕು ಅಧ್ಯಕ್ಷ, ಧರ್ಮಣ್ಣ ಪೂಜಾರಿ, ಕಾರ್ಯಧ್ಯಕ್ಷ ಮಹಾದೇವ ಮಂಟಗಿ, ರೈತ ಕಲ್ಯಾಣಿ ಆವಟೆ ವೈಜನಾಥ್ ಬುರಾಣಿ ಪುರೆ ಕಲ್ಯಾಣಿ ತಡಕಲ್ ಆಸ್ಪಾಕ್ ಮುಲ್ಲಾ ದತ್ತಾತ್ರೇ ಕಬಾಡಿ ನಗರ ಕಾರ್ಯದರ್ಶಿ ಸಾಜಿದರ್ ಅಲಿ ಕುಮಾರ್ ಬಿರಾಜದಾರ್ ಕೊರಳ್ಳಿ ಕಲ್ ಶೆಟ್ಟಿ ಸೇರಿದಂತೆ ಕಿಸಾನ್ ಸಭಾ ಮತ್ತು ಮಜದೂರ ಯೂನಿಯನ್‌ನ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News