Aland | ಖರ್ಗೆ ರ‍್ಯಾಲಿ ನಡೆಸಿದ 'ಸ್ಥಳ ಶುದ್ಧೀಕರಣ' : ಭೀಮ ಆರ್ಮಿ ಆಕ್ರೋಶ

Update: 2026-08-18 18:43 IST

ಆಳಂದ: ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವ ಆರೋಪದ ಘಟನೆಗೆ ಭೀಮ ಆರ್ಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಅಸ್ಪೃಶ್ಯತೆ ಹಾಗೂ ತಾರತಮ್ಯಕ್ಕೆ ಉತ್ತೇಜನ ನೀಡುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭೀಮ ಆರ್ಮಿ ತಾಲೂಕು ಅಧ್ಯಕ್ಷ ಅನಿಲ ಕಾಟೆ ಮಾತನಾಡಿ, ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವುದು ಅತ್ಯಂತ ಆಕ್ಷೇಪಾರ್ಹವಾಗಿದೆ. ಸಾರ್ವಜನಿಕ ಜೀವನದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಘಟನೆಯ ಬಗ್ಗೆ ಪ್ರಧಾನಿ ಕ್ಷಮೆಯಾಚಿಸಬೇಕು ಎಂದು ಅನಿಲ ಕಾಟೆ ಒತ್ತಾಯಿಸಿದರು.

ಭೀಮ ಆರ್ಮಿ ಮೈನಾರ್ಟಿ ಜಿಲ್ಲಾಧ್ಯಕ್ಷ ಸೈಯದ್ ಸದ್ರೋದ್ದೀನ್ ಅನ್ಸಾರಿ ಮಾತನಾಡಿ, ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಮತ್ತು ಗೌರವವನ್ನು ನೀಡಿದೆ. ಆದರೆ ಸಾರ್ವಜನಿಕವಾಗಿ ನಡೆಯುವ ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದರು.

ಧರ್ಮ, ಜಾತಿ ಹಾಗೂ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ವ್ಯಕ್ತಿಯೊಬ್ಬರನ್ನು ಅವಮಾನಿಸುವ ಅಥವಾ ತಾರತಮ್ಯ ತೋರುವ ಬೆಳವಣಿಗೆಗಳಿಗೆ ಕಡಿವಾಣ ಹಾಕಬೇಕು. ಸಂಬಂಧಿಸಿದ ಅಧಿಕಾರಿಗಳು ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿ, ತಪ್ಪು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಭೀಮ ಆರ್ಮಿ ಉಪಾಧ್ಯಕ್ಷ ದಯಾನಂದ ಕಾಂಬಳೆ, ಯುವ ಘಟಕದ ಅಧ್ಯಕ್ಷ ಮುತ್ತಣ್ಣ ಜಂಗಲೆ, ರವೀಂದ್ರ ಗಾಯಕವಾಡ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News