Aland | ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಎಸ್ಕೆಎಂ ಪ್ರತಿಭಟನೆ
ಆಳಂದ : ಎಲ್ನಿನೊ ಪರಿಣಾಮದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸಮಗ್ರ ಪರಿಹಾರ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ (ಎಸ್ಕೆಎಂ) ನೇತೃತ್ವದಲ್ಲಿ ಬುಧವಾರ ಆಳಂದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರೈತಪರ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದ ಪರಿಣಾಮ ತೊಗರಿ, ಸೋಯಾಬೀನ್, ಹತ್ತಿ ಹಾಗೂ ಕಬ್ಬು ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.
ಅಂತರ್ಜಲ ಮಟ್ಟ ಕುಸಿದಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಜಾನುವಾರುಗಳಿಗೆ ಮೇವು ಕೊರತೆ ಎದುರಾಗಿದೆ. ಉದ್ಯೋಗದ ಕೊರತೆಯಿಂದ ಗ್ರಾಮಗಳಿಂದ ಪಟ್ಟಣಗಳಿಗೆ ವಲಸೆ ಹೆಚ್ಚುತ್ತಿದ್ದು, ಸಾಲದ ಒತ್ತಡದಿಂದ ರೈತರ ಆತ್ಮಹತ್ಯೆಗಳೂ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಮಹಾರಾಷ್ಟ್ರದ ಉಜನಿ ಅಣೆಕಟ್ಟಿನಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸಬೇಕು. ಬಾಕಿ ಉಳಿದಿರುವ ಬೆಳೆ ವಿಮೆ ಹಾಗೂ ಬೆಳೆ ಕಟಾವು ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ಅಧ್ಯಯನ ತಂಡವನ್ನು ಕಳುಹಿಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ಬಳಿಕ ತಹಸೀಲ್ದಾರ್ ಮೂಲಕ ರಾಷ್ಟ್ರಪತಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಹಿಂಗಾರು ಮರುಬಿತ್ತನೆಗೆ ಉಚಿತ ಬೀಜ ಹಾಗೂ ರಸಗೊಬ್ಬರ ವಿತರಿಸಬೇಕು. ಕೃಷಿ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಿ, ಸಾಲ ಮನ್ನಾ ಮಾಡಬೇಕು. ಪ್ರತಿ ಎಕರೆಗೆ 30 ಸಾವಿರ ರೂ. ಬರ ಪರಿಹಾರ ಹಾಗೂ ಒಣಗಿದ ಕಬ್ಬು ಬೆಳೆಗೆ 50 ಸಾವಿರ ರೂ. ಪರಿಹಾರ ನೀಡಬೇಕು. ಬಾಕಿ ಉಳಿದಿರುವ ಬೆಳೆ ವಿಮೆ ಮತ್ತು ಬೆಳೆ ಕಟಾವು ಪರಿಹಾರ ಬಿಡುಗಡೆ ಮಾಡಬೇಕು. ಉಜನಿ ಅಣೆಕಟ್ಟಿನಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ, ಗೋಶಾಲೆ ತೆರೆಯುವ ಮೂಲಕ ಜಾನುವಾರುಗಳಿಗೆ ಮೇವು ಒದಗಿಸಬೇಕು. ಬರ ಕಾಮಗಾರಿಗಳನ್ನು ಆರಂಭಿಸಿ ಗ್ರಾಮೀಣರಿಗೆ ಉದ್ಯೋಗ ಕಲ್ಪಿಸಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಹಾಗೂ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಬೆಳೆ ವಿಮೆ ಮಂಜೂರಾತಿಗೆ ಬ್ಯಾಂಕ್ ಸಾಲದ ದೃಢೀಕರಣ ಕಡ್ಡಾಯ ಮಾಡುವ ನಿಯಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಮೋರ್ಚಾದ ಜಿಲ್ಲಾ ಮುಖಂಡ ಭೀಮಾಶಂಕರ ಮಾಡಿಯಾಳ, ಕಿಸಾನಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಅಧ್ಯಕ್ಷ ಧರ್ಮಣ್ಣಾ ಪೂಜಾರಿ, ಗೌರವ ಅಧ್ಯಕ್ಷ ಚಂದ್ರಕಾoತ ಖೋಬ್ರೆ, ಕಾನೂನು ಸಲಹೆಗಾರ ಪಂಡಿತ್ ಸಲಗರ, ಕಲ್ಯಾಣಿ ಅವುಟೆ, ಮಹಾದೇವ ಪೂಜಾರಿ, ಹಿರಿಯ ಪ್ರಕಾಶ ಜಾನೆ, ಉಮಾವತಿ ಪಾಟೀಲ ಅನೇಕರು ಭಾಗವಹಿಸಿದ್ದರು.