ವಿದ್ಯಾರ್ಥಿಗಳಲ್ಲಿ ಅಂಬೇಡ್ಕರ್ ಜ್ಞಾನ ಹೆಚ್ಚಾಗಬೇಕು: ಕುಮಾರ್ ಬುರಡಿಕಟ್ಟಿ
ಕಲಬುರಗಿ: ಇಂದಿನ ವಿದ್ಯಾರ್ಥಿಗಳು ಮೌಢ್ಯವನ್ನು ಬಿತ್ತರಿಸುವ ‘ವಾಟ್ಸಪ್ ಯುನಿವರ್ಸಿಟಿ’ಯ ಪ್ರಭಾವದಿಂದ ಹೊರಬಂದು, ಡಾ. ಬಿ.ಆರ್. ಅಂಬೇಡ್ಕರ್ ಅವರ ಬರಹಗಳು ಮತ್ತು ಚಿಂತನೆಗಳನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದು ಪತ್ರಕರ್ತ ಕುಮಾರ್ ಬುರಡಿಕಟ್ಟಿ ಹೇಳಿದರು.
ನಗರದ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಡಾ. ಅಂಬೇಡ್ಕರ್ ವಿಚಾರ ವೇದಿಕೆ ವತಿಯಿಂದ ಆಯೋಜಿಸಿದ್ದ ‘ಕರ್ನಾಟಕದಲ್ಲಿ ಅಂಬೇಡ್ಕರ್ ಹೆಜ್ಜೆ ಗುರುತುಗಳು’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿ ಬೌದ್ಧ ಧಮ್ಮವನ್ನು ಸ್ವೀಕರಿಸಿದ್ದರೂ, ಕೆಲವು ಮತಾಂಧ ಶಕ್ತಿಗಳು ಅವರನ್ನು ಹಿಂದೂ ಧರ್ಮದ ಸುಧಾರಕರೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿವೆ. ಇಂತಹ ಅಪಪ್ರಚಾರಗಳನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರ ಕುರಿತು ಇತರರ ವ್ಯಾಖ್ಯಾನಗಳನ್ನು ಅವಲಂಬಿಸುವ ಬದಲು, ಅವರ ಮೂಲ ಬರಹಗಳನ್ನೇ ನೇರವಾಗಿ ಓದಿ ಅವರ ಚಿಂತನೆಗಳನ್ನು ಅರ್ಥಮಾಡಿಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.
ಚಿಂತಕ ಹಾಗೂ ಚಲನಚಿತ್ರ ನಿರ್ದೇಶಕ ಎನ್.ಎಸ್. ಶಂಕರ್ ನಿರ್ದೇಶಿಸಿರುವ, ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ನಿರ್ಮಿಸಿರುವ ‘ಕರ್ನಾಟಕದಲ್ಲಿ ಅಂಬೇಡ್ಕರ್ ಹೆಜ್ಜೆ ಗುರುತುಗಳು’ ಸಾಕ್ಷ್ಯಚಿತ್ರವನ್ನು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗಾಗಿ ಪ್ರದರ್ಶಿಸಲಾಯಿತು.
ಈ ಸಾಕ್ಷ್ಯಚಿತ್ರದಲ್ಲಿ ಡಾ. ಅಂಬೇಡ್ಕರ್ ಅವರು ಬೆಳಗಾವಿ, ವಿಜಯಪುರ, ಬೆಂಗಳೂರು, ಕೆಜಿಎಫ್, ಹಾಸನ, ವಾಡಿ ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭಗಳನ್ನು ಸಂಶೋಧನೆ ನಡೆಸಿ ದಾಖಲಿಸಲಾಗಿದೆ. ಅಂಬೇಡ್ಕರ್ ಅವರ ಕರ್ನಾಟಕ ಪ್ರವಾಸ ಹಾಗೂ ಇಲ್ಲಿನ ಸಾಮಾಜಿಕ ಚಳವಳಿಗಳೊಂದಿಗೆ ಅವರಿಗಿದ್ದ ನಂಟನ್ನು ಪರಿಚಯಿಸುವ ಅಪರೂಪದ ಸಾಕ್ಷ್ಯಚಿತ್ರ ಇದಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಡಾ. ಅಂಬೇಡ್ಕರ್ ವಿಚಾರ ವೇದಿಕೆಯ ಸಂಚಾಲಕ ಡಾ. ಗಾಂಧೀಜಿ ಮೊಳೆಕರ ಅವರು ಸ್ವಾಗತಿಸಿದರು. ಡಾ. ಅರುಣ್ ಜೋಳದಕೂಡ್ಲಿಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಾಕ್ಷ್ಯಚಿತ್ರದ ಮಹತ್ವವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ನಿರ್ದೇಶಕ ಎನ್.ಎಸ್. ಶಂಕರ್ ಅವರಿಗೆ ನುಡಿನಮನ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿದ್ದಪ್ಪ ಎಸ್. ಕಾಂತ ಅವರು ಮಾತನಾಡಿ, ಕಾಲೇಜಿನಲ್ಲಿ ಡಾ. ಅಂಬೇಡ್ಕರ್ ಅವರ ವಿಚಾರಧಾರೆ ಹಾಗೂ ಸಂವಿಧಾನಿಕ ಮೌಲ್ಯಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಧ್ಯಾಪಕರಾದ ಡಾ. ನಿರ್ಮಲ ಶಿರಗಾಪುರ, ಡಾ. ವಸಂತ ನಾಶಿ, ಡಾ. ದತ್ತುರಾಯ ಶಿವರಾಜ, ಡಾ. ಶಿವಕುಮಾರ್, ಡಾ. ಸುರೇಶ್ ಕುಲಕರ್ಣಿ, ಡಾ. ಅರುಣ್ ಕುಮಾರ್ ಹಾಗೂ ಡಾ. ಕರಿಬಸಪ್ಪ ಸೇರಿದಂತೆ ಹಲವು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.