×
Ad

ಖರ್ಗೆ, ಖಂಡ್ರೆ, ಅಜಯ್ ಸಿಂಗ್ ಗೆ ಡಿಸಿಎಂ ಸ್ಥಾನ ನೀಡಲಿ: ಪೂಣ್ಯಶೆಟ್ಟಿ

Update: 2026-05-30 21:40 IST

ಚಿಂಚೋಳಿ: ಕರ್ನಾಟಕ ಕಾಂಗ್ರೆಸ್ ಪಕ್ಷವು ನೂತನ ಸಚಿವ ಸಂಪುಟ ರಚನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ, ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದೀಪಕನಾಗ ಪೂಣ್ಯ ಶೆಟ್ಟಿ ಆಗ್ರಹಿಸಿದರು.

ಪಟ್ಟಣದ ಸಮೀಪದ ಪೋಲ್ಕಪಳ್ಳಿ ಅತಿಥಿಗೃಹದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಿಂದುಳಿದ ಹಾಗೂ 371(ಜೆ) ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಭಾಗದ ಇಬ್ಬರು ಹಿರಿಯ 2 ಶಾಸಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅದ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ದಕ್ಷಿಣ ಕರ್ನಾಟಕ ಭಾಗದ ನಾಯಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ಇದೀಗ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ನಾಯಕರಿಗೂ ಅವಕಾಶ ಕಲ್ಪಿಸಬೇಕು ಎಂದರು.

ದಲಿತ ಸಮುದಾಯದ ಪ್ರಮುಖ ನಾಯಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರು ಪಕ್ಷದ ಸಂಘಟನೆ, ಜನಪರ ಕಾರ್ಯಗಳು ಹಾಗೂ ಆಡಳಿತದಲ್ಲಿ ದಕ್ಷತೆ ತೋರಿದ್ದು, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.

ಅದೇ ರೀತಿ ಅರಣ್ಯ ಸಚಿವರು ಹಾಗೂ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರು ಹಲವು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದು, ಅನುಭವಿ ಆಡಳಿತಗಾರರಾಗಿದ್ದಾರೆ. ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಜೇವರ್ಗಿ ಕ್ಷೇತ್ರದ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್ ಅವರು ಸಹ ಮೂರು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದು, ಉಪ ಮುಖ್ಯಮಂತ್ರಿ ಹುದ್ದೆಗೆ ಅರ್ಹತೆ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಅವರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ ಅವರು, ಪಕ್ಷದ ಸಂಘಟನೆ ಹಾಗೂ ಆಡಳಿತದಲ್ಲಿ ಉತ್ತಮ ಅನುಭವ ಹೊಂದಿರುವ ಡಾ. ಪಾಟೀಲ್ ಅವರು ಈ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News