ಅಫಜಲಪುರ: ತಾಲೂಕಿನ ರೈತರ ಬಹುದಿನಗಳ ಕನಸಾಗಿದ್ದ ಭೀಮಾ ನದಿ ನೀರನ್ನು ಕೆರೆಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಮತ್ತಷ್ಟು ವೇಗ ಸಿಕ್ಕಿದ್ದು, 314 ಕೋಟಿ ರೂ. ವೆಚ್ಚದಲ್ಲಿ ಅಫಜಲಪುರ ಮತಕ್ಷೇತ್ರದ 10 ಕೆರೆಗಳನ್ನು ತುಂಬಿಸುವ ಯೋಜನೆಯಡಿ ಎರಡನೇ ಕೆರೆಯಾದ ಬಳ್ಳೂರಗಿ ಕೆರೆಗೆ ನೀರು ತುಂಬಿಸುವ ಪ್ರಾಯೋಗಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಆಳಂದ ಶಾಸಕ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಅಧ್ಯಕ್ಷ ಅರುಣಕುಮಾರ ಎಂ. ಪಾಟೀಲ ಅವರು ಬಳ್ಳೂರಗಿ ಕೆರೆಗೆ ಬಾಗಿನ ಅರ್ಪಿಸಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಆರ್. ಪಾಟೀಲ, ಸತತ ಬರಗಾಲದಿಂದ ಬಳಲುತ್ತಿರುವ ಆಳಂದ ಮತ್ತು ಅಫಜಲಪುರ ತಾಲೂಕಿನ ಜನರಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಕೆರೆ ತುಂಬಿಸುವ ಯೋಜನೆ ರೂಪಿಸಿದೆ ಎಂದು ಹೇಳಿದರು.

2018ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಮಂಜೂರಾತಿ ನೀಡಿದ್ದು, ಆರಂಭದಲ್ಲಿ 118 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ವೆಚ್ಚ ಹೆಚ್ಚಾಗಿ ಪ್ರಸ್ತುತ ಸುಮಾರು 450 ಕೋಟಿ ರೂ. ಗೆ ತಲುಪಿದೆ. ಯೋಜನೆಯಡಿ ಒಟ್ಟು 36 ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ ಮಾತನಾಡಿ, ಭೀಮಾ ನದಿ ನೀರನ್ನು ಕೆರೆಗಳಿಗೆ ಹರಿಸುವುದು ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ಬಳ್ಳೂರಗಿ ಕೆರೆಗೆ ನೀರು ಹರಿಯುತ್ತಿರುವುದು ರೈತರಿಗೆ ಸಂತಸದ ಕ್ಷಣವಾಗಿದೆ. ನೀರು ಸಂಗ್ರಹವಾಗುವುದರಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದ್ದು, ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಸಹಕಾರಿಯಾಗಲಿದೆ ಎಂದರು.

ಬರಪೀಡಿತ ಅಫಜಲಪುರ ಭಾಗದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಯೋಜನೆಯಡಿ ಉಳಿದ ಕೆರೆಗಳಿಗೂ ಹಂತ ಹಂತವಾಗಿ ನೀರು ಹರಿಸುವ ಮೂಲಕ ಕ್ಷೇತ್ರದ ನೀರಾವರಿ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಹೇಳಿದರು.

ಭೀಮಾ ನದಿ ನೀರು ಕೆರೆಗಳಿಗೆ ಹರಿದುಬರುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುವ ನಿರೀಕ್ಷೆಯಿದ್ದು, ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಗೂ ಶಾಶ್ವತ ಪರಿಹಾರ ದೊರೆಯುವ ಆಶಾಭಾವನೆ ವ್ಯಕ್ತವಾಯಿತು.

ಇದೇ ವೇಳೆ ಬಿ.ಆರ್. ಪಾಟೀಲ ಅವರು ಸೂರತ್–ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಬಡದಾಳ ಸಮೀಪ ಹಾನಿಗೊಂಡ ಅಮರ್ಜಾ ಜಲಾಶಯದ ಪೈಪ್‌ಲೈನ್ ಕುರಿತು ಮಾಹಿತಿ ನೀಡಿ, ಸೆಪ್ಟೆಂಬರ್ 10ರೊಳಗೆ ದುರಸ್ತಿ ಪೂರ್ಣಗೊಳಿಸುವುದಾಗಿ ಹೆದ್ದಾರಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈಗಾಗಲೇ ಪೈಪ್ ಜೋಡಣೆ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.

ಬಳ್ಳೂರಗಿ ಕೆರೆಗೆ ನೀರು ಹರಿಯುತ್ತಿದ್ದಂತೆ ರೈತರು ಸಂತಸ ವ್ಯಕ್ತಪಡಿಸಿ, ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಂಜುನಾಥ ಅಂಜುಟಗಿ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಅಣವೀರಯ್ಯ ಮಠಪತಿ, ಸುರೇಶ್ ಗದಗಯ್ಯ ಮಠಪತಿ, ಶ್ರೀಮಂತ ಪಾಟೀಲ, ಶರಣಬಸಪ್ಪ ಪಾಟೀಲ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ರೈತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor