ಆಳಂದವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಜು.27ರಂದು ಬಿಜೆಪಿ ಪ್ರತಿಭಟನೆ
ಆಳಂದ: ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸುವಂತೆ ಆಗ್ರಹಿಸಿ ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಆಳಂದ ಬಸ್ ನಿಲ್ದಾಣದ ಎದುರು ಆಳಂದ ಮಂಡಲ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ವರ್ಷ ಸಮರ್ಪಕ ಮಳೆಯಾಗದ ಕಾರಣ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಕೆರೆ-ಕಟ್ಟೆಗಳು ಹಾಗೂ ಹಳ್ಳ-ಕೊಳ್ಳಗಳು ನೀರಿಲ್ಲದೆ ಬತ್ತಿವೆ. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆಯೂ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿಯೂ ಸರ್ಕಾರ ಆಳಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರತಿಭಟನೆಯ ಮೂಲಕ ಆಳಂದ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸುವುದು, ರೈತರಿಗೆ ಬೆಳೆಹಾನಿ ಪರಿಹಾರ, ಬರ ಪರಿಹಾರ, ಬಡ್ಡಿರಹಿತ ಸಾಲ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ರೈತರ ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ರೈತರು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮಲ್ಲಿಕಾರ್ಜುನ ಕಂದಗೂಳೆ ಮನವಿ ಮಾಡಿದ್ದಾರೆ.