ನರೇಗಾ ರದ್ದುಪಡಿಸಿ ಕಾರ್ಮಿಕರ ಉದ್ಯೋಗ ಹಕ್ಕು ಕಸಿದುಕೊಂಡ ಕೇಂದ್ರ ಸರಕಾರ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿಯ ಡಿ.ಎ.ಆರ್.ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ
ಕಲಬುರಗಿ: ಕೇಂದ್ರ ಸರ್ಕಾರ ನರೇಗಾ ಯೋಜನೆಯನ್ನು ರದ್ದುಪಡಿಸಿ, ವಿಬಿ ಜಿ ರಾಮ್ ಜಿ ಎಂಬ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದು ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
77ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಡಿ.ಎ.ಆರ್ ಮೈದಾನದಲ್ಲಿ ಸೋಮವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಹಿಂದೆ ನರೇಗಾ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ 100 ದಿನಗಳ ಗ್ಯಾರಂಟಿ ಉದ್ಯೋಗ ಸಿಗುತ್ತಿತ್ತು. ಈಗ 125 ದಿನಗಳ ಕೆಲಸ ಕೊಡುವ ನೆಪದಲ್ಲಿ ಹೊಸ ಕಾಯ್ದೆ ತಂದು ಕಾರ್ಮಿಕರನ್ನು ಗುತ್ತಿಗೆದಾರರ ಆಳಿನಂತೆ ಕೆಲಸ ಮಾಡುವ ಸ್ಥಿತಿಗೆ ತಳ್ಳಲಾಗಿದೆ. ಇದಲ್ಲದೆ ರಾಜ್ಯ ಸರ್ಕಾರದಿಂದ ಶೇ.40 ಪಾಲು ನೀಡಬೇಕಾದ ಪರಿಸ್ಥಿತಿ ನಿರ್ಮಿಸಿರುವುದು ಕೇಂದ್ರ ಸರ್ಕಾರದ ರಾಜ್ಯಗಳ ಮೇಲಿನ ದೌರ್ಜನ್ಯವಾಗಿದೆ ಎಂದು ಟೀಕಿಸಿದರು.
ನರೇಗಾ ಜಾರಿಗೆ ಬಂದ ನಂತರ ಕಳೆದ 19 ವರ್ಷಗಳಲ್ಲಿ ದೇಶಾದ್ಯಂತ 183 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, 77 ಲಕ್ಷ ಹಳ್ಳಿಗಳಲ್ಲಿ ಕೆಲಸ ಸೃಷ್ಟಿಯಾಗಿದೆ. ಕರ್ನಾಟಕದಲ್ಲಿ ಮಾತ್ರವೇ 36 ಕೋಟಿ ಮಾನವ ದಿನಗಳು, 16 ಲಕ್ಷ ಹಳ್ಳಿಗಳಲ್ಲಿ ಉದ್ಯೋಗ ನೀಡಲಾಗಿದೆ. ಇದರಿಂದ ಒಂದು ಕೋಟಿ ಕುಟುಂಬಗಳಿಗೆ ಉದ್ಯೋಗ ದೊರೆತಿದ್ದು, ಅವರಲ್ಲಿ 60 ಲಕ್ಷ ಮಹಿಳೆಯರು ಉದ್ಯೋಗ ಪಡೆದಿರುವುದು ಮಹತ್ವದ ಸಂಗತಿ. ಇಂತಹ ಜನಪರ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿ ಜನರ ಜೀವನದೊಂದಿಗೆ ಆಟವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಉದ್ಯೋಗ, ಆಹಾರ ಮತ್ತು ಶಿಕ್ಷಣದ ಹಕ್ಕಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ನರೇಗಾ ಯೋಜನೆ ವಿಶ್ವದಲ್ಲೇ ಅತಿದೊಡ್ಡ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಸಮಾನತೆ ಖಚಿತಪಡಿಸುವ ಯೋಜನೆ ಎಂದು ಅವರು ಹೇಳಿದರು.
1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂದ ದಿನ ಮಹಿಳೆಯರಿಗೆ ಸಮಾನ ಅವಕಾಶ ನೀಡಿದ ಐತಿಹಾಸಿಕ ದಿನವಾಗಿದೆ. ಸಂವಿಧಾನ ರಾಜಕೀಯ ಸಮಾನತೆ ನೀಡಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ಒದಗಿಸಿದೆ. ಬಡ-ಶ್ರೀಮಂತ ಎನ್ನುವ ಭೇದವಿಲ್ಲದೆ ಪ್ರತಿಯೊಂದು ಮತಕ್ಕೂ ಒಂದೇ ಮೌಲ್ಯವಿದೆ. ಆದರೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಇಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದರು.
ಕಲಬುರಗಿ ಜಿಲ್ಲೆಯಲ್ಲಿ 2 ಸಿರಿಧಾನ್ಯ ಸಂಸ್ಕರಣ ಕೇಂದ್ರಗಳು, 6 ಕೋಟಿ ರೂ. ವೆಚ್ಚದಲ್ಲಿ ತಾಲೂಕುಗಳಲ್ಲಿ ಶೀಥಲೀಕರಣ ಘಟಕಗಳ ಸ್ಥಾಪನೆ, 7 ಮೈಕ್ರೋ ವಾಟರ್ ಶೆಡ್ ಟ್ರೀಟ್ ಮೆಂಟ್ ಪ್ರೊಜೆಕ್ಟ್ ಸ್ಥಾಪನೆ, ತೊಗರಿ ಹಾಗೂ ಇತರೆ ಧಾನ್ಯಗಳ ಪ್ರಾಥಮಿಕ ಸಂಸ್ಕರಣ, ಗ್ರಾಂಡಿಂಗ್ ಹಾಗೂ ಪ್ಯಾಕೇಜಿಂಗ್ ಘಟಕಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದರು.
ಗ್ರಾಮೀಣ ಭಾಗದ ರಸ್ತೆ ಅಭಿವೃದ್ದಿಗೆ ಒತ್ತು ನೀಡಿದ್ದು, 1,000 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ರಸ್ತೆಗಳ ಅಭಿವೃದ್ದಿ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮಾದರಿಯಲ್ಲಿ ಪ್ರಗತಿಪಥ ಯೋಜನೆಯಡಿ 157 ಕಿಮಿ ಉದ್ದದ ರಸ್ತೆ ಅಭಿವೃದ್ದಿಗೆ ಕ್ರಮವಹಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಒದಗಿಸುವ ಯೋಜನೆಗೆ ಕ್ರಮವಹಿಸಿದ್ದು 1,052 ಕೋಟಿ ರೂ. ವೆಚ್ಚದಲ್ಲಿ 8 ಕಡೆ ಈ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಎರಡು ವರ್ಷದ ಹಿಂದೆ ನಾನು ಮಾತು ಕೊಟ್ಟಂತೆ ಕಲಬುರಗಿಯ ವಾಜಪೇಯಿ ಬಡಾವಣೆಯಲ್ಲಿ ಪ್ರಬುದ್ಧ ಅಕಾಡೆಮಿ ಸ್ಥಾಪಿಸಿ ಐಎಎಸ್, ಕೆಎಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಪ್ರಸ್ತುತ 500 ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದು, ಮುಂದಿನ ದಿನಗಳಲ್ಲಿ 1500ಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಹೊಸ ಪ್ರಜಾಸೌಧ ನಿರ್ಮಾಣ ಮಾಡಲಾಗುವುದು. ಕಲಬುರಗಿ ನಗರದ ರಸ್ತೆಗಳ ಅಡಿಟ್ ಮಾಡಲಾಗಿದ್ದು, ನಗರದ ಗಾರ್ಡನ್ ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ನೀರಿನ ಮೂಲಗಳ ಸಂರಕ್ಷಣೆ ಮುಂತಾದ ಅಭಿವೃದ್ದಿಗೆ 300 ಕೋಟಿ ರೂ. ಗಳ ನೀಲಿ ನಕ್ಷೆ ತಯಾರಿಸಲಾಗಿದೆ. ಈ ಯೋಜನೆಯಡಿಯಲ್ಲಿ 164 ಕೋಟಿ ರೂ. ವೆಚ್ಚದಲ್ಲಿ 43 ರಸ್ತೆಗಳ ಅಭಿವೃದ್ದಿ, 25 ಸರ್ಕಲ್ ಗಳ ಅಭಿವೃದ್ದಿ, 36 ಕೋಟಿ ರೂ. ವೆಚ್ಚದಲ್ಲಿ 33 ಗಾರ್ಡನ್ ಗಳ ಅಭಿವೃದ್ದಿ ಸೇರಿವೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ 43 ಎಕರೆ ಪ್ರದೇಶದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಮೃಗಾಲಯ ಸ್ಥಾಪನೆ ಮಾಡಲಾಗುತ್ತಿದೆ. ಬಹುಶಃ ಏಪ್ರೀಲ್ ತಿಂಗಳಲ್ಲಿ ಉದ್ಘಾಟನೆ ನೆರವೇರಿಸಲಾಗುವುದು. ಸರ್ಕಾರಿ ಸೌಲಭ್ಯ ವಿಸ್ತರಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇ-ಸೇವೆ, ಸಕಾಲ ಸೇವೆ, ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ರೈತರ ಹೆಸರು ನೋಂದಣಿಯಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ 2025-26 ನೇ ಸಾಲಿನ ಆತ್ಮ ಯೋಜನೆ ಅಡಿಯಲ್ಲಿ 9 ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿತರಣೆ ಮಾಡಲಾಯಿತು.
2024-25 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಸನ್ಮಾನ, 2025 ನೇ ಸಾಲಿನ ಸಿಎಂ ಸಹಕಾರ ರತ್ನ ಪ್ರಶಸ್ತಿ ಪಡೆದ ಪುರಸ್ಕೃತರಿಗೆ ಸನ್ಮಾನ ನೆರವೇರಿಸಲಾಯಿತು. ಇದೇ ವೇಳೆಯಲ್ಲೇ ರಾಷ್ಟ್ರಪತಿ ಪ್ರಶಸ್ತಿ ವಿಜೇತ 146 ಸಿವಿಲ್ ಹೆಡ್ ಕಾನ್ಸಟೇಬಲ್ ಅವರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕಿ ಖನೀಜ್ ಫಾತಿಮಾ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕುಡಾ ಅಧ್ಯಕ್ಷ ಮಝಹರ್ ಖಾನ್ ಆಲಂ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಮಹಾಪೌರ ವರ್ಷಾ ಜಾನೆ, ಉಪಮಹಾಪೌರ ತೃಪ್ತಿ ಲಾಖೆ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಜಿಲ್ಲಾ ಪಂಚಾಯತ್ ಸಿಇಒ ಭವರ್ ಸಿಂಗ್ ಮೀನಾ, ಎಸ್ಪಿ ಅಡ್ಡೂರು ಶ್ರೀನಿವಾಸಲು, ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಶಿಕ್ಷಣ ಇಲಾಖೆಯ ಅಪರ ಆಯುಕ್ತ ರಾಹುಲ್ ಪಾಂಡ್ವೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.