×
Ad

Chitapur | ದಂಡೋತಿ ಮೊರಾರ್ಜಿ ವಸತಿ ಶಾಲೆಗೆ ಬಿಜೆಪಿ ನಾಯಕರ ಭೇಟಿ : ಪರಿಶೀಲನೆ

ಅಧಿಕಾರಿಗಳ ಅಮಾನತು, ಆಹಾರ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಆಗ್ರಹ

Update: 2026-07-15 18:55 IST

ಚಿತ್ತಾಪುರ : ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕರಾದ ಬಸವರಾಜ ಮತ್ತಿಮೂಡ, ಡಾ. ಅವಿನಾಶ ಜಾಧವ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿ ಶಾಲೆಯಲ್ಲಿನ ಸೌಲಭ್ಯಗಳು ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಶಾಲೆಯ ಆಹಾರ ಸಂಗ್ರಹಣಾ ಕೇಂದ್ರ, ಅಡುಗೆ ಕೋಣೆ, ಆಡಳಿತ ವಿಭಾಗ, ಶೌಚಾಲಯ, ಕುಡಿಯುವ ನೀರಿನ ಘಟಕ, ಗಾರ್ಡನ್, ಆಟದ ಮೈದಾನ ಹಾಗೂ ಸ್ವಚ್ಛತೆ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳು, ಪಾಲಕರು ಮತ್ತು ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳು ಹಾಗೂ ಪಾಲಕರು, ವಸತಿ ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ, ಕುಡಿಯುವ ನೀರಿನ ಅಭಾವ, ಗುಣಮಟ್ಟದ ಆಹಾರ ನೀಡದಿರುವುದು ಹಾಗೂ ಸ್ವಚ್ಛತೆ ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡರು.

ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಮಾತನಾಡಿ, ಇತ್ತೀಚೆಗೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡದಿರುವುದು ಬೇಜವಾಬ್ದಾರಿತನದ ನಡೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಮಾನತುಗೊಳಿಸಿ, ಆಹಾರ ಸರಬರಾಜು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೆನು ಪ್ರಕಾರ ಆಹಾರ ವಿತರಿಸಲಾಗುತ್ತಿಲ್ಲ. ವೆಜ್, ನಾನ್‌ವೆಜ್, ಮೊಟ್ಟೆ, ತರಕಾರಿ ಸೇರಿದಂತೆ ಹಲವು ಆಹಾರ ಪದಾರ್ಥಗಳ ಪೂರೈಕೆಯಲ್ಲಿ ಅಕ್ರಮ ನಡೆದಿದ್ದು, ವಾರ್ಡನ್ ಹಾಗೂ ಸಂಬಂಧಿತ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಫುಡ್ ಪಾಯಿಸನ್ ಘಟನೆಯಿಂದ ಭಯಗೊಂಡಿರುವ ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರಲು ಅಗತ್ಯ ಮೂಲಸೌಕರ್ಯ ಹಾಗೂ ಸುರಕ್ಷತಾ ಕ್ರಮಗಳನ್ನು ತಕ್ಷಣ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಶಾಲೆಯಲ್ಲಿನ ಲೋಪದೋಷಗಳ ಕುರಿತು ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಸಲ್ಲಿಸಲಾಗುವುದು. ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಸ್ಥಿತಿ ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಕರೆಯಬೇಕು ಎಂದು ತೇಲ್ಕೂರ್ ಹೇಳಿದರು.

ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲಿಯೇ ಇಂತಹ ಪರಿಸ್ಥಿತಿ ಇದ್ದರೆ ಉಳಿದ ತಾಲೂಕುಗಳ ಸ್ಥಿತಿ ಹೇಗಿರಬಹುದು ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಾಬುರಾವ್ ಚವ್ಹಾಣ, ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಮುಖಂಡರಾದ ಶರಣಪ್ಪ ತಳವಾರ, ಧರ್ಮಣ್ಣ ಇಟಗಿ, ಮಲ್ಲಿಕಾರ್ಜುನ ಎಮ್ಮೆನೋರ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಆನಂದ ಪಾಟೀಲ ಆಳಂದ, ಗುಂಡು ಮತ್ತಿಮುಡ್, ವೀರಣ್ಣ ಯಾರಿ, ಸುರೇಶ್ ರಾಠೋಡ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News