ಸೇಡಂ ಅನ್ನು ‘ಸ್ಪೋರ್ಟ್ಸ್ ಹಬ್’ ಆಗಿ ರೂಪಿಸಲು ಬದ್ಧ: ಸಚಿವ ಡಾ. ಶರಣಪ್ರಕಾಶ ಪಾಟೀಲ
ಪ್ರಥಮ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ಗೆ ಅದ್ದೂರಿ ಚಾಲನೆ
ಸೇಡಂ: ಸೇಡಂ ತಾಲೂಕನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ‘ಸ್ಪೋರ್ಟ್ಸ್ ಹಬ್’ ಆಗಿ ರೂಪಿಸಲು ತಾವು ಬದ್ಧರಾಗಿದ್ದು, ಕ್ರೀಡಾ ಕ್ಷೇತ್ರಕ್ಕೆ ಅಗತ್ಯವಾದ ಎಲ್ಲ ರೀತಿಯ ಸಹಕಾರ ಮತ್ತು ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಭರವಸೆ ನೀಡಿದರು.
ನಗರದ ತಾಲೂಕು ಒಳಾಂಗಣ ಕ್ರೀಡಾಂಗಣದಲ್ಲಿ ರವಿವಾರ ‘ಬ್ಯಾಡ್ಮಿಂಟನ್ ಗೆಳೆಯರ ಬಳಗ’ದ ವತಿಯಿಂದ ಆಯೋಜಿಸಿದ್ದ ಪ್ರಥಮ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ಗೆ ಸ್ವತಃ ಬ್ಯಾಡ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ನಿತ್ಯ ದೈಹಿಕ ಚಟುವಟಿಕೆ ಹಾಗೂ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು. ಯುವಜನತೆ ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.
ತಮ್ಮ ಅಧಿಕಾರಾವಧಿಯಲ್ಲಿ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಅಗತ್ಯ ಅನುದಾನ ಒದಗಿಸಲಾಗಿದೆ. ಇದರ ಫಲವಾಗಿ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗಿದ್ದು, ಕ್ರೀಡಾಪಟುಗಳು ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಅವರು ಆಶಿಸಿದರು.
ಕ್ರೀಡಾಂಗಣದ ಸೌಲಭ್ಯ ಪರಿಶೀಲನೆ:
ಕಾರ್ಯಕ್ರಮಕ್ಕೂ ಮುನ್ನ ಕ್ರೀಡಾಂಗಣದಲ್ಲಿನ ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್ ವೈರಿಂಗ್ ಹಾಗೂ ಆಸನ ವ್ಯವಸ್ಥೆಗಳನ್ನು ಸಚಿವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಂಡುಬಂದ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಸಂಬಂಧಪಟ್ಟ ಎಂಜಿನಿಯರಿಂಗ್ ಅಧಿಕಾರಿಗಳಿಗೆ ಸ್ಥಳದಲ್ಲೇ ದೂರವಾಣಿ ಮೂಲಕ ಸೂಚನೆ ನೀಡಿ, ಕಾಮಗಾರಿಗಳಲ್ಲಿ ಯಾವುದೇ ವಿಳಂಬ ಮಾಡದಂತೆ ಖಡಕ್ ನಿರ್ದೇಶನ ನೀಡಿದರು.
ಯಾದಗಿರಿ ಜೋಡಿಗೆ ಪ್ರಥಮ ಪ್ರಶಸ್ತಿ:
ಟೂರ್ನಮೆಂಟ್ನಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಒಟ್ಟು 40 ತಂಡಗಳು ಭಾಗವಹಿಸಿದ್ದವು. ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಯಾದಗಿರಿಯ ಮಿಥುನ್ ಮತ್ತು ವೆಂಕಟೇಶ್ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ದ್ವಿತೀಯ ಸ್ಥಾನ: ಚಿತ್ತಾಪುರದ ವಿಜಯಕುಮಾರ್ ಮತ್ತು ಖದೀರ್ ಜೋಡಿ ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್ವರರಾವ್ ಮಾಲಿಪಾಟೀಲ, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮುನ್ನಾಗೌಡ ವಿಶ್ವನಾಥ ರೆಡ್ಡಿ ಪಾಟೀಲ ಬೊಮ್ಮನಳ್ಳಿ, ಶರಣಗೌಡ ಪೊಲೀಸ್ ಪಾಟೀಲ ನಾಚವಾರ, ಭೀಮರೆಡ್ಡಿ ಪಾಟೀಲ ನಾಚವಾರ, ಪ್ರಕಾಶ್ ರೆಡ್ಡಿ, ಸಿದ್ದಲಿಂಗರೆಡ್ಡಿ ಕುರುಕುಂಟಾ, ದೇವೇಂದ್ರಪ್ಪ ಮಡಗು ಚಂದಾಪೂರ, ಮಲ್ಲಕಪ್ಪ ಪೂಜಾರಿ ಬಟಗೇರಾ, ಶರಣು ಬಟಗೇರ, ಸಿಪಿಐ ಮಹಾದೇವ ದಿಡ್ಡಿಮನಿ ಸೇರಿದಂತೆ ಹಲವು ಮುಖಂಡರು ಹಾಗೂ ಬ್ಯಾಡ್ಮಿಂಟನ್ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಶರಣಬಸಪ್ಪ ಬೆನಕನಹಳ್ಳಿ ಸ್ವಾಗತಿಸಿದರು. ಮೋಹನಕುಮಾರ (ಮಣಿ) ಕಾರ್ಯಕ್ರಮ ನಿರೂಪಿಸಿ ವಂದಿಸಿದರು.