×
Ad

ರೈತರ ಸಾಲ ಮನ್ನಾ ಕುರಿತು ಸಮಗ್ರ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

Update: 2026-07-07 11:10 IST

ಕಲಬುರಗಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಕುರಿತಂತೆ ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅದರ ಬಗ್ಗೆ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

ಕಲಬುರಗಿ ವಿಭಾಗದ ಅಧಿಕಾರಿಗಳ ಸಭೆಯನ್ನು ಇಂದು ನಡೆಸಲಾಗುತ್ತಿದ್ದು, ಬರ ನಿರ್ವಹಣೆ, ಕುಡಿಯುವ ನೀರು, ಮೇವು ಹಾಗೂ ರೈತರ ಸಮಸ್ಯೆಗಳ ಕುರಿತು ಪರಾಮರ್ಶೆ ನಡೆಸಲಾಗುವುದು. ಇದೇ ರೀತಿ ಮುಂದಿನ ಎರಡು–ಮೂರು ದಿನಗಳಲ್ಲಿ ಬೆಳಗಾವಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನೂ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ರೈತರ ಸಾಲ ಮನ್ನಾ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, "ಯಾವ ಸಾಲ? ಯಾರ ಸಾಲ? ಯಾವ ರೀತಿಯ ಸಾಲ? ಎಷ್ಟು ಪ್ರಮಾಣದ ಸಾಲ? ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕವೇ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ" ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ತಕ್ಕಂತೆ ರೈತರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News