ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸಿಪಿಐ ಆಗ್ರಹ
ಕಲಬುರಗಿ : ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಸೋಮವಾರ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಳೆಗಾಲ ಆರಂಭವಾಗಿ ಎರಡು ತಿಂಗಳು ಕಳೆದರೂ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದರಿಂದ ರೈತರು ಬಿತ್ತಿದ ಬೀಜಗಳು ಮೊಳಕೆಯೊಡೆಯದೆ ನಾಶವಾಗುತ್ತಿದ್ದು, ಈಗಾಗಲೇ ಬೆಳೆದಿರುವ ಬೆಳೆಗಳೂ ಒಣಗಿ ಹೋಗುತ್ತಿವೆ. ಪರಿಣಾಮ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖಂಡರು ಆರೋಪಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಕೃಷಿ ಕೆಲಸಗಳಿಲ್ಲದೆ ಕೂಲಿಕಾರರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಕಾಮಗಾರಿಗಳನ್ನು ಆರಂಭಿಸದಿರುವುದು ಗ್ರಾಮೀಣ ಜನರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಹೇಳಿದರು.
ರೈತರು ಸಾರ್ವಜನಿಕ ಹಾಗೂ ಖಾಸಗಿ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಮತ್ತು ಖಾಸಗಿ ಸಾಲದಾತರಿಂದ ಪಡೆದಿರುವ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬರದಿಂದ ಸಾವಿರಾರು ರೈತ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ತಕ್ಷಣ ಕೆಲಸಗಳನ್ನು ಆರಂಭಿಸಿ ಉದ್ಯೋಗ ಕಲ್ಪಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೃಷಿ ಅಭಿವೃದ್ಧಿಗೆ ಪೂರಕವಾದ ಸಮಗ್ರ ಸಾಲ ನೀತಿಯನ್ನು ಜಾರಿಗೊಳಿಸಬೇಕು. ಹತ್ತಿ, ಕಬ್ಬು ಸೇರಿದಂತೆ ಎಲ್ಲಾ ಬೆಳೆಗಳನ್ನು ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸಿ, ರೈತರಿಗೆ ಸಮರ್ಪಕ ವಿಮೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ ಮನವಿ ಮಾಡಿದೆ.
ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ್ ರಾಠೋಡ್, ಸಿದ್ಧಪ್ಪ ಫಾಲ್ಕಿ, ಭೀಮಾಶಂಕರ ಮಾಡಿಯಾಳ, ಎಚ್.ಎಸ್. ಪತಕಿ, ಪ್ರಭುದೇವ ಯಳಸಂಗಿ, ಸಾಜಿದ್ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.