ಆಳಂದ: ಬರ ಪರಿಹಾರ ಕಾಮಗಾರಿಗಳಿಗೆ ಆಗ್ರಹಿಸಿ ಮೋಘಾ-ಕೆ ಗ್ರಾಮ ಪಂಚಾಯತ್ ಎದುರು ಸಿಪಿಐ(ಎಂ) ಪ್ರತಿಭಟನೆ
ಆಳಂದ: ಪಂಚಾಯತ್ ವ್ಯಾಪ್ತಿಯಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ತಕ್ಷಣ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸವಾದಿ) ನೇತೃತ್ವದಲ್ಲಿ ಮೋಘಾ-ಕೆ ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ಪಿಡಿಒಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಪಂಚಾಯತ್ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ತುರ್ತಾಗಿ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್ಆರ್ಇಜಿಎ) ಅಡಿಯಲ್ಲಿ ಎಲ್ಲ ಅರ್ಹರಿಗೆ ಉದ್ಯೋಗ ಹಾಗೂ ಜಾಬ್ ಕಾರ್ಡ್ಗಳನ್ನು ವಿತರಿಸುವುದು, ನೀರಿನ ಸಂರಕ್ಷಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳುವುದು, ಇಕ್ಕಳಕಿ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸುವುದು ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ(ಎಂ) ಆಳಂದ ತಾಲೂಕು ಕಾರ್ಯದರ್ಶಿ ಸಲ್ಮಾನ್ ಖಾನ್, ಪಂಚಾಯತ್ ಆಡಳಿತಕ್ಕೆ ಆಗಸ್ಟ್ 15ರವರೆಗೆ ಗಡುವು ನೀಡಲಾಗಿದೆ. ಅಷ್ಟರೊಳಗೆ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ಸಾರ್ವಜನಿಕರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸದಿದ್ದರೆ, ಸಿಪಿಐ(ಎಂ) ನೇತೃತ್ವದಲ್ಲಿ ಮತ್ತಷ್ಟು ವ್ಯಾಪಕ ಹಾಗೂ ಪ್ರಬಲ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಾಲೂಕು ಸಮಿತಿ ಸದಸ್ಯ ಪ್ರಮೋದ್ ಪಾಂಚಾಳ್ ಮಾತನಾಡಿ, ಗ್ರಾಮೀಣ ಜನರ ಸಮಸ್ಯೆಗಳನ್ನು ಆಡಳಿತ ಗಂಭೀರವಾಗಿ ಪರಿಗಣಿಸಬೇಕು. ಜನರು ಸಂಘಟಿತರಾಗಿ ಹೋರಾಟ ನಡೆಸಿದಾಗ ಮಾತ್ರ ನ್ಯಾಯ ದೊರೆಯುತ್ತದೆ. ಆದ್ದರಿಂದ ಗ್ರಾಮಸ್ಥರು ತಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಸಮಿತಿ ಸದಸ್ಯ ಪಾಂಡುರಂಗ ಮಾವಿನ್ಕರ್ ಮಾತನಾಡಿ, ಈ ವರ್ಷ ಸಮರ್ಪಕ ಮಳೆಯಾಗದ ಪರಿಣಾಮ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಈ ಪ್ರದೇಶವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸಮರ್ಪಕ ಬರ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಪಾಂಡುರಂಗ ಮಾವಿನ್ಕರ್, ಇಕ್ಕಳಕಿ ಶಾಖಾ ಕಾರ್ಯದರ್ಶಿ ರೂಪಾ ಇಕ್ಕಳಕಿ, ನೀಲಮ್ಮ ಉಕ್ಳೆ, ಶಾಂತಾ ನಡಗೇರಿ, ಶಾಣಮ್ಮ ಶೇಳ್ಕೆ, ಗುಂಡಮ್ಮ ನಡಗೇರಿ, ಗುರುನಾಥ ಶೇಳ್ಕೆ, ಬಸವರಾಜ್ ಫುಲಾರ್, ಮಲ್ಲಣ್ಣ ಉಕ್ಳೆ, ಅಣ್ಣಪ್ಪ ನಡಗೇರಿ, ಸಿದ್ದಾರ್ಥ್ ಹಸೂರೆ ಹಾಗೂ ಇಕ್ಕಳಕಿ ಗ್ರಾಮದ 64ಕ್ಕೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿದರು.