ದೇಶದಲ್ಲಿ ಮನುಸ್ಮೃತಿ ಜಾರಿಗೆ ಪ್ರಯತ್ನ ನಡೆಯುತ್ತಿದೆ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ದೇಶದಲ್ಲಿ ವಿಚಿತ್ರ ವಾತಾವರಣ ನಿರ್ಮಾಣವಾಗಿದೆ. ಒಂದು ಕಡೆ ಸಂವಿಧಾನ ರಕ್ಷಣೆಯ ಹೋರಾಟ ನಡೆಯುತ್ತಿದ್ದರೆ, ಮತ್ತೊಂದು ಕಡೆ ಮನುಸ್ಮೃತಿ ಜಾರಿಗೆ ಮಾಡಲು ಪ್ರಯತ್ನ ನಡೆಯುತ್ತಿದೆ. ಈ ದೊಡ್ಡ ಷಡ್ಯಂತ್ರದ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಹೋರಾಟ ನಡೆಸುತ್ತಿದ್ದಾರೆ. ನೀವೆಲ್ಲರೂ ಅವರ ಕೈ ಬಲಪಡಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು.
ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಹೆಸರು ನಾಮಕರಣ ಹಾಗೂ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಾಲುಮತ ಸಮಾಜ ಯಾವಾಗಲೂ ನಂಬಿಕೆಗೆ ದ್ರೋಹ ಮಾಡದವರು. ಸುಳ್ಳು ಮಾತುಗಳನ್ನು ನಂಬದೆ, ನಿಮ್ಮ ಪರವಾಗಿ ಕೆಲಸ ಮಾಡುವವರನ್ನು ಬೆಂಬಲಿಸಿ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ನುಡಿದಂತೆ ನಡೆದು, ಚುನಾವಣೆಗೆ ಮುನ್ನ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು.
ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಾಮಾಜಿಕ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಹೆಸರು ಪಡೆದಿದ್ದಾರೆ. ಕುರುಬ ಸಮಾಜಕ್ಕೆ 3 ಎಕರೆ ಜಾಗ ಮೀಸಲು ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಬೇಡಿಕೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಅಡೆತಡೆ ನಿವಾರಿಸಿ ಬೇಡಿಕೆ ಈಡೇರಿಸಲಾಗಿದೆ ಎಂದು ವಿವರಿಸಿದರು.
ಸಚಿವ ಭೈರತಿ ಸುರೇಶ್ ಮಾತನಾಡಿ, ಶಿಕ್ಷಣದಿಂದಲೇ ಅಭಿವೃದ್ದಿ ಸಾಧ್ಯ. ಕುರುಬರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ದರಾಮನಂದ ಮಹಾಸ್ವಾಮಿ, ಮಾಳಿಂಗರಾಯ ಮಹಾರಾಜ, ಹವಾ ಮಲ್ಲಿನಾಥ ಮಹಾರಾಜ, ಸಂಸದ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಗುರುಬ ಸಮುದಾಯದ ಮುಖಂಡ ಗುರುನಾಥ ಎಸ್.ಪೂಜಾರಿ ಸೇರಿದಂತೆ ಹಲವರು ಹಾಜರಿದ್ದರು.