ಐತಿಹಾಸಿಕ ಕೋಟೆ, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು : ಸಚಿವ ಪ್ರಿಯಾಂಕ್ ಖರ್ಗೆ

►"ಕಲಬುರಗಿ ಅಭಿವೃದ್ಧಿಗೆ 3,000 ಕೋಟಿ ರೂ. ಗೂ ಅಧಿಕ ಪರಿಹಾರ; 32 ಸಾವಿರಕ್ಕೂ ಹೆಚ್ಚು ಉದ್ಯೋಗ" ► ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

Update: 2026-08-15 17:24 IST

ಕಲಬುರಗಿ: ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ, ಸಾರಿಗೆ, ಉದ್ಯೋಗ, ಕೃಷಿ ಹಾಗೂ ನಗರ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಕಲಬುರಗಿ ನಗರವನ್ನು ಸುಸ್ಥಿರ ಹಾಗೂ ಸ್ಮಾರ್ಟ್ ಸಿಟಿಯನ್ನಾಗಿ ರೂಪಿಸಲು ನೀಲನಕ್ಷೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಪಥಸಂಚಲನ ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.

ಕಲಬುರಗಿ ಕೋಟೆ, ಮಳಖೇಡ್ ಕೋಟೆ, ಕಾಳಗಿಯ ಸೂರ್ಯನಾರಾಯಣ ದೇವಸ್ಥಾನ ಹಾಗೂ ಸನ್ನತಿ ಸೇರಿದಂತೆ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ದೇವಲ ಗಾಣಗಾಪುರದ ಮಾಸ್ಟರ್ ಪ್ಲ್ಯಾನ್ ಸಿದ್ಧಗೊಂಡಿದ್ದು, ಮೊದಲ ಹಂತದ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.

ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಎಂಎಸ್‌ಡಿಸಿ, ಜಿಟಿಟಿಸಿ ಸೆಂಟರ್ ಹಾಗೂ ಸ್ಕಿಲ್ ಪಾರ್ಕ್ ಸೇರಿದಂತೆ ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 72,186 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು, ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದ 32,177 ಮಂದಿಗೆ ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು.

ರೈತರಿಗೆ 3,035 ಕೋಟಿ ರೂ. ಪರಿಹಾರ :

ಕಳೆದ ಮೂರು ವರ್ಷಗಳಲ್ಲಿ ಫಸಲ್ ಬಿಮಾ ಯೋಜನೆ, ಅತಿವೃಷ್ಟಿ-ಅನಾವೃಷ್ಟಿ ಪರಿಹಾರ ಸೇರಿದಂತೆ ಒಟ್ಟು ₹3,035 ಕೋಟಿ ಪರಿಹಾರವನ್ನು ಜಿಲ್ಲೆಯ ರೈತರಿಗೆ ನೀಡಲಾಗಿದೆ. 2026-27ನೇ ಸಾಲಿನಲ್ಲಿ 4,52,609 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದು, ಕಲಬುರಗಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ ಎಂದರು.

ಹೈನುಗಾರಿಕೆಗೆ ಉತ್ತೇಜನ ನೀಡಲು ಕೆಕೆಆರ್‌ಡಿಬಿ ನಿಧಿಯಿಂದ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪಿಸಲಾಗುತ್ತಿದೆ. ದಿನಕ್ಕೆ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆ ಗುರಿ ಹೊಂದಿರುವ ಈ ಯೋಜನೆಯಿಂದ ಮೂರು ಜಿಲ್ಲೆಗಳ 25 ಸಾವಿರ ಕೃಷಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

400 ಎಲೆಕ್ಟ್ರಿಕ್ ಬಸ್‌ಗಳ ಖರೀದಿ :

ಗ್ರಾಮೀಣ ಭಾಗದಲ್ಲಿ ಸಾರಿಗೆ ಸಂಪರ್ಕ ಸುಧಾರಿಸಲು 152 ಕೋಟಿ ರೂ. ವೆಚ್ಚದಲ್ಲಿ 400 ಹೊಸ ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಅನುಮೋದನೆ ನೀಡಲಾಗಿದೆ. ಕಲಬುರಗಿ ನಗರದ ನಾಲ್ಕು ದಿಕ್ಕುಗಳಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದರು.

‘ಕಲ್ಯಾಣ ಪಥ’ ಯೋಜನೆಯಡಿ 226.10 ಕೋಟಿ ರೂ. ವೆಚ್ಚದಲ್ಲಿ 64 ರಸ್ತೆಗಳನ್ನು ಹಾಗೂ ‘ಪ್ರಗತಿ ಪಥ’ ಯೋಜನೆಯಡಿ 185.33 ಕೋಟಿ ರೂ. ವೆಚ್ಚದಲ್ಲಿ 59 ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

10 ಸಾವಿರ ಭಾರತ್ ಜೋಡೋ ಯುವ ಸಂಘ :

ಯುವಜನರಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯ ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ 10,000 ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ 1,010 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.

ಮಾದಕ ವಸ್ತುಗಳ ವಿರುದ್ಧ ಪೊಲೀಸ್ ಇಲಾಖೆಯ ‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಅಭಿಯಾನಗಳಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಲಬುರಗಿ ನಗರದಲ್ಲಿ ಈಗಾಗಲೇ 297 ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಿ 64,490 ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಸ್ಥಿರ ಇಂಧನಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ಸೋಲಾರ್ ಮೈಕ್ರೋ ಗ್ರಿಡ್‌ಗಳು ಸ್ಥಾಪಿಸಲಾಗುತ್ತಿದ್ದು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ 80 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಬಳಿಕ 16 ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ನಂತರ ಶಾಲಾ ಮಕ್ಕಳಿಂದ ರಾಷ್ಟ್ರಭಕ್ತಿ ಸಂದೇಶ ಸಾರುವ ನೃತ್ಯ ಪ್ರದರ್ಶನಗಳು ನಡೆದವು. ಇದು ಸಭಿಕರನ್ನು ರಂಜಿಸಿತು.

ಕಾರ್ಯಕ್ರಮದಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕಿ ಕನೀಜ್ ಫಾತೀಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ಮರತೂರು, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಲಾಖೆ, ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ವೆಂಕಟ್ ಸಿಂಗ್, ಪ್ರಾದೇಶಿಕ ಆಯುಕ್ತರಾದ ಜಹೀರಾ ನಸ್ಸೀಂ, ಐಜಿಪಿ ಶಾಂತನು ಸಿನ್ಹಾ, ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್, ಕೆಕೆಆರ್‌ಟಿಸಿ ಎಂಡಿ ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ, ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಉದನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುಜಾತಾ ಪಾಟೀಲ ಹಾಗೂ ಸತ್ಯಂ ಪಿಯು ಕಾಲೇಜಿನ ಪ್ರಾಚಾರ್ಯ ಬಿ.ಎಚ್. ನಿರಗುಡಿ ಕಾರ್ಯಕ್ರಮ ನಿರೂಪಿಸಿದರು.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News