ಕಲಬುರಗಿ | ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ : ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು
ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ , ಆ.13: ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದಡಿ ವಿಜಯಪುರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೋಝಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ ಖಮರ್ ಜುನೈದ್ ಖುರೇಷಿ ಎಂಬವರು ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದೇ ಆ.11ರಂದು ಕೊಪ್ಪಳದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ʼಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.ಗಳ ನಗದು ಪ್ರೋತ್ಸಾಹ ಧನ ನೀಡಲಾಗುವುದುʼ ಎಂದು ಸಾರ್ವಜನಿಕವಾಗಿ ಘೋಷಣೆ ಮಾಡಿರುವ ಹೇಳಿಕೆಯು ಒಂದು ಸಮುದಾಯವನ್ನು ಗುರಿಯಾಗಿಸಿ ಪ್ರಚೋದಿಸುವ ಕೆಲಸ ಮಾಡಿದ್ದಾರೆ. ಆದ್ದರಿಂದ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಈ ದೂರಿನನ್ವಯ ರೋಝಾ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಲಂ 196, 299, 353(1)(c),353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.