ಹೈದರಾಬಾದಿನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು
ಕಲಬುರಗಿ/ಹೈದರಾಬಾದ್: ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ಪಕ್ಕದ ತೆಲಂಗಾಣದ ಹೈದರಾಬಾದ್ ನಗರದ ಮಿಯಾಪುರ್ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ವರದಿಯಾಗಿದೆ.
ಈ ಘಟನೆಯನ್ನು ಸಾಮೂಹಿಕ ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಮೂಲದ ಲಕ್ಷ್ಮಯ್ಯ (60), ವೆಂಕಟಮ್ಮ (55), ಅನಿಲ್ (32), ಕವಿತಾ (24), ಮತ್ತು ಎರಡು ವರ್ಷದ (ಅಪ್ಪು) ಮಗು ಎಂದು ಗುರುತಿಸಲಾಗಿದೆ.
ಈ ಕುಟುಂಬವು ಕಳೆದ ಕೆಲವು ವರ್ಷಗಳಿಂದ ಹೈದರಾಬಾದ್ನ ಮಿಯ್ಯಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ಪ್ರದೇಶದಲ್ಲಿ ವಾಸಿಸುತ್ತಿತ್ತು. ಏಕಾಏಕಿ ಕುಟುಂಬದ ಐವರು ಮೃತಪಟ್ಟಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಬೆನ್ನಲ್ಲೇ ಮಿಯಾಪುರ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹಗಳನ್ನು ಸಮೀಪದ ಆಸ್ಪತ್ರೆಯಲ್ಲಿ ಮರಣೊತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.