ಜೇವರ್ಗಿ | ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ CPIಯಿಂದ ಪಾದಯಾತ್ರೆ

Update: 2026-08-09 19:18 IST

ಜೇವರ್ಗಿ: “ಬದಲಾವಣೆ ಅಗತ್ಯವಾಗಿದೆ” ಎಂಬ ಘೋಷಣೆಯೊಂದಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ರಾಜಕೀಯ ಅಭಿಯಾನದ ಅಂಗವಾಗಿ ಆ.10ರಂದು ಖಾದ್ಯಾಪುರದಿಂದ ಯಾಳವಾರ ಗ್ರಾಮ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜೇವರ್ಗಿ ತಾಲೂಕು ಕಾರ್ಯದರ್ಶಿ ಮಹಮ್ಮದ್ ಚೌಧರಿ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 9.30ಕ್ಕೆ ಖಾದ್ಯಾಪುರ ಗ್ರಾಮದ ಅಯ್ಯಣ್ಣ ಮುತ್ಯಾನ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಕೊಡಚಿ ಮಾರ್ಗವಾಗಿ ಯಾಳವಾರ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಲಿದೆ. ಪಾದಯಾತ್ರೆಯ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಗುವುದು. ಬಳಿಕ ಸಮಸ್ಯೆಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಯಾಳವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 1.36 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ ಮುಖಂಡರು ಆಗ್ರಹಿಸಿದ್ದಾರೆ. ಸಾರ್ವಜನಿಕರ ಹಣ ದುರುಪಯೋಗವಾಗಿರುವ ಆರೋಪದ ಬಗ್ಗೆ ಪಾರದರ್ಶಕ ತನಿಖೆ ನಡೆಸಿ ವಾಸ್ತವಾಂಶವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲಸೌಕರ್ಯಕ್ಕೆ ಒತ್ತಾಯ

ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಸಾರ್ವಜನಿಕ ಶೌಚಾಲಯ, ಶಾಲೆಗಳಿಗೆ ಅಗತ್ಯ ಶಿಕ್ಷಕರ ನೇಮಕ, ಆರೋಗ್ಯ ಸೌಲಭ್ಯ, ಬಸ್ ವ್ಯವಸ್ಥೆ, ಬೀದಿ ದೀಪ ಹಾಗೂ ಕೊಳವೆಬಾವಿಗಳ ದುರಸ್ತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ಅಲ್ಲದೆ, ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕ ಕೆಲಸ ಒದಗಿಸಬೇಕು. ವಸತಿ ಹಾಗೂ ನಿವೇಶನ ರಹಿತರಿಗೆ ಮನೆ ಮತ್ತು ನಿವೇಶನ ಕಲ್ಪಿಸಬೇಕು. ಬಾಕಿ ಇರುವ ವಿಧವಾ, ವೃದ್ಧಾಪ್ಯ ಹಾಗೂ ವಿಶೇಷಚೇತನರ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶ್ ಕುಮಾರ್ ರಾಠೋಡ್, ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ದೊಡ್ಡಮನಿ, ಮಲ್ಕಪ್ಪ ವಾಗಣಗೇರಿ, ರಾಘವೇಂದ್ರ ಹಂಗರಗ, ಖಾದ್ಯಾಪುರ ಘಟಕದ ರವಿಕುಮಾರ್ ಈರಣ್ಣಗೌಡ, ಕೊಡಚಿ ಘಟಕದ ನಂದಪ್ಪ ಗುರಿಕಾರ್, ಭೀಮನವಾಡಿ, ನಿಂಗಣ್ಣ ಶಹಾಬಾದ್, ಲಾಲ್ ಅಹಮದ್ ಚೌದರಿ, ನಿಂಗಪ್ಪ ಕವಲದಾರ್, ಸಿದ್ದಣ್ಣ ವಾಡಿ, ಮಲ್ಲೇಶಿ ವಡಿಗೇರಿ, ರಫೀಕ್ ಇನಾಮ್ದಾರ್ ಸೇರಿದಂತೆ ನೂರಾರು ಗ್ರಾಮಸ್ಥರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಪ್ರಗತಿಪರರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಪಾದಯಾತ್ರೆಯು ಆ.14ರಂದು ಜೇವರ್ಗಿ ತಾಲೂಕು ಕೇಂದ್ರದಲ್ಲಿ ಸಮಾರೋಪಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮಹಮ್ಮದ್ ಚೌದರಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News