×
Ad

Kalaburagi | 1 ಲಕ್ಷ ಲಂಚ ಪಡೆದ ಪ್ರಕರಣ: ತಹಶೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು ಶಿಕ್ಷೆ

Update: 2026-07-09 19:17 IST

ಕಲಬುರಗಿ : ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ತಹಸೀಲ್ದಾರ್ ಆಗಿದ್ದ ಶಶಿಕಲಾ ಪಾದಗಟ್ಟಿ ಹಾಗೂ ಖಾಸಗಿ ವ್ಯಕ್ತಿ ಶಿವಾನಂದ ಜಮಖಂಡಿ ಅವರಿಗೆ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ತಲಾ ನಾಲ್ಕು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರದಂತೆ, ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರನ್ನು ಬಗೆಹರಿಸಲು ಸಹಾಯ ಮಾಡುವುದಾಗಿ ಹೇಳಿ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲಂಚ ನೀಡದಿದ್ದರೆ ಕೆಲಸದ ಸ್ಥಳದಿಂದ ತೆರವುಗೊಳಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಶಿವಲಿಂಗಯ್ಯ ಅವರು 2017ರ ಆಗಸ್ಟ್ 31ರಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಬಲೆ ಬೀಸಿ, ಶಶಿಕಲಾ ಪಾದಗಟ್ಟಿ ಅವರ ಸೂಚನೆಯಂತೆ ಶಿವಾನಂದ ಜಮಖಂಡಿ ಮೂಲಕ ಲಂಚದ ಹಣ ಸ್ವೀಕರಿಸುವ ವೇಳೆ ಇಬ್ಬರನ್ನೂ ಬಂಧಿಸಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದರು.

ಶಶಿಕಲಾ ಪಾದಗಟ್ಟಿ ಅವರಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 7 ಹಾಗೂ 13(1)(ಡಿ) ಓದು 13(2)ರಡಿ, ಶಿವಾನಂದ ಜಮಖಂಡಿ ಅವರಿಗೆ ಕಲಂ 8ರಡಿ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಜುಲೈ 8ರಂದು ತೀರ್ಪು ಪ್ರಕಟಿಸಿದರು.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠ ವಾದ ಮಂಡಿಸಿದರು. ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹಣಮಂತರಾಯ ಹಾಗೂ ಗುಂಡುರಾವ್ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News