×
Ad

Kalaburagi | ಬೆಳೆ ವಿಮೆ ಹಣ ಬಿಡುಗಡೆಗೆ ಸರಕಾರ ಕ್ರಮ; ನವಕರ್ನಾಟಕ ರೈತ ಸಂಘ ಕೃತಜ್ಞತೆ

Update: 2026-07-10 20:14 IST

ಕಲಬುರಗಿ : ರಾಜ್ಯ ಸರ್ಕಾರ ರೈತರ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡುವ ಮೂಲಕ ರೈತರ ಬೇಡಿಕೆಗೆ ಸ್ಪಂದಿಸಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನವಕರ್ನಾಟಕ ರೈತ ಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ದಯಾನಂದ ಪಾಟೀಲ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನ ಬೆಳೆ ವಿಮೆ ಪರಿಹಾರ, ರೈತರ ಸಾಲಮನ್ನಾ ಹಾಗೂ ಬರಗಾಲ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಂಘದ ವತಿಯಿಂದ ಸರ್ಕಾರದ ಗಮನಕ್ಕೆ ತರಲಾಗಿತ್ತು. ಅದರಂತೆ ಬೆಳೆ ವಿಮೆ ಪರಿಹಾರವಾಗಿ 225 ಕೋಟಿ ರೂ. ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ನೀಡಿದ್ದು, ತ್ವರಿತವಾಗಿ ಕ್ರಮ ಕೈಗೊಂಡಿರುವುದು ರೈತಪರ ನಿಲುವಿನ ಪ್ರತೀಕವಾಗಿದೆ ಎಂದು ಹೇಳಿದರು.

ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಇದೇ ಬೇಡಿಕೆಗಳನ್ನು ಮನವಿಗಳ ಮೂಲಕ ಸಲ್ಲಿಸಲಾಗಿತ್ತು. ಆದರೆ ಅವುಗಳಿಗೆ ಸೂಕ್ತ ಸ್ಪಂದನೆ ದೊರೆತಿರಲಿಲ್ಲ. ಇದೀಗ ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಿ ಶೀಘ್ರ ಕ್ರಮ ಕೈಗೊಂಡಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಲಬುರಗಿ ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಮ್ಮುಖದಲ್ಲಿ ನವಕರ್ನಾಟಕ ರೈತ ಸಂಘದ ಪರವಾಗಿ ಹಾಗೂ ಜಿಲ್ಲೆಯ ರೈತರ ಪರವಾಗಿ ಕೃತಜ್ಞತೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ರೈತರ ಇನ್ನೆರಡು ಪ್ರಮುಖ ಬೇಡಿಕೆಗಳಾದ ಸಾಲಮನ್ನಾ ಹಾಗೂ ರಾಜ್ಯದಲ್ಲಿ ಬರಗಾಲ ಘೋಷಣೆ ಕುರಿತು ಸರ್ಕಾರ ಶೀಘ್ರ ನಿರ್ಧಾರ ಕೈಗೊಂಡು ಸಂಕಷ್ಟದಲ್ಲಿರುವ ರೈತರಿಗೆ ಮತ್ತಷ್ಟು ನೆರವು ನೀಡಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ನವಕರ್ನಾಟಕ ರೈತ ಸಂಘದ ಮುಖಂಡರಾದ ಭಗವಂತರಾವ ಪಾಟೀಲ್, ಜಗದೇವಪ್ಪ ಪಾಟೀಲ್, ಬಸವರಾಜ ಮುದ್ದಾಣೆ, ಮಲ್ಲಿಕಾರ್ಜುನ ಪಾಟೀಲ್, ಗುಂಡಪ್ಪ ಪಟ್ಟಣ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News