×
Ad

Kalaburagi | ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ, ಅಕ್ಷರ ದಾಸೋಹ ನೌಕರರ ಪ್ರತಿಭಟನೆ

Update: 2026-07-10 20:21 IST

ಕಲಬುರಗಿ : ವೇತನ ಪರಿಷ್ಕರಣೆ, ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕಗಳ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ನೌಕರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಹಲವು ವರ್ಷಗಳಿಂದ ಬಾಕಿ ಉಳಿದಿರುವ ನ್ಯಾಯಸಮ್ಮತ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಬಿಎಲ್‌ಒ (BLO), ಎಸ್‌ಐಆರ್ (SIR) ಸೇರಿದಂತೆ ಇಲಾಖೇತರ ಸಮೀಕ್ಷಾ ಕಾರ್ಯಗಳಿಂದ ಸಂಪೂರ್ಣ ಮುಕ್ತಗೊಳಿಸಬೇಕು ಎಂದು ಅವರು ಆಗ್ರಹಿಸಿದರು. 50 ವರ್ಷ ಮೇಲ್ಪಟ್ಟವರು, ಸಹಾಯಕಿಯರಿಲ್ಲದ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಹೆಚ್ಚುವರಿ ಕರ್ತವ್ಯಗಳನ್ನು ನೀಡಬಾರದು ಎಂದು ಮನವಿ ಮಾಡಿದರು.

‘ಪೋಷಣ್ ಟ್ರ್ಯಾಕರ್’ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳವನ್ನು ನಿಲ್ಲಿಸಬೇಕು. ಮೊಬೈಲ್, ಡೇಟಾ ಹಾಗೂ ನಿರ್ವಹಣಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಡಿಜಿಟಲ್ ಕಾರ್ಯಗಳಿಗಾಗಿ ಗುಣಮಟ್ಟದ ಟ್ಯಾಬ್ಲೆಟ್ ಹಾಗೂ ಉಚಿತ ಡೇಟಾ ಪ್ಯಾಕ್ ಒದಗಿಸಬೇಕು. ಎಫ್‌ಆರ್‌ಎಸ್ (FRS) ಹಾಗೂ ಇ-ಕೆವೈಸಿ (E-KYC) ಕಡ್ಡಾಯಗೊಳಿಸಿರುವ ಕ್ರಮವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಸುಸಜ್ಜಿತ ಕಟ್ಟಡ, ಗ್ಯಾಸ್ ಸಂಪರ್ಕ ಹಾಗೂ ಅಗತ್ಯ ಅಡುಗೆ ಉಪಕರಣಗಳನ್ನು ಒದಗಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಮಹಾನಗರಗಳಲ್ಲಿ 15 ಸಾವಿರ ರೂ., ನಗರ ಪ್ರದೇಶಗಳಲ್ಲಿ 10 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 5 ಸಾವಿರ ರೂ. ಬಾಡಿಗೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ 41 ಸಾವಿರ ರೂ. ಹಾಗೂ ಸಹಾಯಕಿಯರಿಗೆ 35 ಸಾವಿರ ರೂ. ಮಾಸಿಕ ವೇತನ ನಿಗದಿಪಡಿಸಬೇಕು. ನಿವೃತ್ತಿಯ ನಂತರ 18 ಸಾವಿರ ರೂ. ಮಾಸಿಕ ಪಿಂಚಣಿ ನೀಡಬೇಕು. ಅಂಗನವಾಡಿ ನೌಕರರನ್ನು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ತಂದು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ದೇಶಾದ್ಯಂತ ಏಕರೂಪದ ಸೇವಾ ನಿಯಮಗಳನ್ನು ಜಾರಿಗೊಳಿಸಿ, ವಾರ್ಷಿಕ ಶೇ.10ರಷ್ಟು ವೇತನ ಹೆಚ್ಚಳ, ವೈದ್ಯಕೀಯ ಹಾಗೂ ಬೇಸಿಗೆ ರಜೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹ ಅಂಗನವಾಡಿ ಕಾರ್ಯಕರ್ತೆಯರನ್ನೇ ಬಡ್ತಿ ಮೂಲಕ ನೇಮಕ ಮಾಡಬೇಕು. ಎಎನ್‌ಎಂ, ಪ್ರಾಥಮಿಕ ಶಾಲಾ ಶಿಕ್ಷಕ, ಗ್ರಾಮ ಸೇವಕ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಆದ್ಯತೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಮುಖಂಡರಾದ ಶಾಂತಾ ಘಂಟೆ, ಎಂ.ಬಿ. ಸಜ್ಜನ್, ಶಾಂತಾ ಸರಡಗಿ, ನಾಗಪ್ಪ ರಾಯಚೂರಕರ್, ರಾಜಮತಿ ಪಾಟೀಲ, ಮಹಾದೇವಿ ಪೋಲಕಪಳ್ಳಿ, ವಿಜಯಲಕ್ಷ್ಮೀ ಹಿರೇಮಠ, ಸಂಗೀತಾ ಗುತ್ತೇದಾರ, ರೇಖಾ ರಂಗನ್ ಸೇರಿದಂತೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಮತ್ತು ಅಕ್ಷರ ದಾಸೋಹ ನೌಕರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News