Kalaburagi | ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಮೊಗವೀರ, ಬಾರಿಕೇರ ಪದಗಳನ್ನೂ ಸೇರಿಸಿ: ತಿಪ್ಪಣಪ್ಪ ಕಮಕನೂರ್

Update: 2026-08-08 17:59 IST

ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ ಹಾಗೂ ಬೆಸ್ತ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನದ ವ್ಯಾಪ್ತಿಗೆ ಮೊಗವೀರ ಹಾಗೂ ಬಾರಿಕೇರ ಪದಗಳನ್ನೂ ಸೇರಿಸಿ ಸಮಗ್ರ ಅಧ್ಯಯನ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ್ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಿ, ಕಬ್ಬಲಿಗ, ಅಂಬಿಗ ಹಾಗೂ ಬೆಸ್ತ ಸಮುದಾಯಗಳು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಟೋಕರೆಕೋಳಿ, ಕೋಯಾ, ಕೋಳಿಡೋರ ಹಾಗೂ ಕೋಲ್ಚಾ ಸಮುದಾಯಗಳ ಪರ್ಯಾಯ ಪದಗಳೇ ಎಂಬುದನ್ನು ಪರಿಶೀಲಿಸಲು ಸರ್ಕಾರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಅಧ್ಯಯನಕ್ಕೆ ಅಂದಾಜು 17.45 ಲಕ್ಷ ರೂ. ವೆಚ್ಚವಾಗಲಿದ್ದು, 2026–27ನೇ ಸಾಲಿನ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಯೋಜನೆಗಳಡಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಅಧ್ಯಯನದ ವ್ಯಾಪ್ತಿಯಲ್ಲಿ ಮೊಗವೀರ ಹಾಗೂ ಬಾರಿಕೇರ ಪದಗಳನ್ನೂ ಸೇರಿಸುವ ಅಗತ್ಯವಿದೆ ಎಂದು ಹೇಳಿದರು.

ಈ ಕುರಿತು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರಿಗೆ ಹೆಚ್ಚುವರಿ ಪ್ರಸ್ತಾವನೆ ಕಳುಹಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಪ್ರಸ್ತಾವನೆ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಹಿಂದೆ ವಾಪಸ್ ಬಂದಿದ್ದ ಪ್ರಸ್ತಾವನೆಯನ್ನು ಮತ್ತೊಮ್ಮೆ ಪರಿಶೀಲಿಸಿ, ಅಗತ್ಯ ಪದಗಳನ್ನು ಒಳಗೊಂಡ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ತಳವಾರ ಸಮುದಾಯಕ್ಕೆ ಪ್ರಮಾಣಪತ್ರದ ಸಮಸ್ಯೆ ನಿವಾರಣೆಗೆ ಮನವಿ :

ಕಲಬುರಗಿ ಹಾಗೂ ಅಫಜಲಪುರದಲ್ಲಿ ತಳವಾರ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ತೊಂದರೆ ಎದುರಾಗುತ್ತಿದೆ. ತಳವಾರ ಸಮುದಾಯವು ಪ್ರವರ್ಗ–1ರಲ್ಲಿ ಇದ್ದ ಸಂದರ್ಭದಲ್ಲಿ ತಂದೆ ಅಥವಾ ತಾಯಿ ಹೆಸರಿನೊಂದಿಗೆ ‘ತಳವಾರ’ ಎಂದು ದಾಖಲಾಗಿದ್ದರೆ, ಅಂತಹ ಅರ್ಹರಿಗೆ ಜಾತಿ ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಈ ಕುರಿತು ಸೂಕ್ತ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಕಮಕನೂರ್ ತಿಳಿಸಿದರು.

ಕುಲಶಾಸ್ತ್ರೀಯ ಅಧ್ಯಯನವನ್ನು ಪರಿಣಾಮಕಾರಿಯಾಗಿ ನಡೆಸಲು ರಾಜ್ಯದ 31 ಜಿಲ್ಲೆಗಳ ಸಮುದಾಯದ ಪ್ರಮುಖರನ್ನು ಒಳಗೊಂಡ ಸಭೆ ನಡೆಸಿ, ಅವರೊಂದಿಗೆ ಸಮಾಲೋಚನೆ ಬಳಿಕ ಮುಖ್ಯಮಂತ್ರಿಗಳಿಗೆ ಸಮಗ್ರ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯ ಅವರ ಮೂರ್ತಿ ಸ್ಥಾಪಿಸುವುದರ ಜೊತೆಗೆ ಕೋಲಿ–ಅಂಬಿಗ ಸಮುದಾಯ ಭವನ ನಿರ್ಮಾಣಕ್ಕೂ ಸರ್ಕಾರದ ಗಮನ ಸೆಳೆಯಲಾಗುವುದು. ಸಮುದಾಯದ ಎಲ್ಲರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಲಬುರಗಿಯಲ್ಲಿ ಸುಮಾರು 8ರಿಂದ 10 ಅಧಿಕಾರಿಗಳು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ದೂರವಾಣಿ ಕರೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಕಚೇರಿ ಕೆಲಸಗಳಿಗಾಗಿ ಸಂಪರ್ಕಿಸಿದರೂ ಸೂಕ್ತ ಪ್ರತಿಕ್ರಿಯೆ ನೀಡದೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿರುವುದಾಗಿ ತಿಪ್ಪಣಪ್ಪ ಕಮಕನೂರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಮೇಶ್ ನಾಟೇಕರ್, ವಿಜಯಕುಮಾರ, ಚಂದ್ರಶೇಖರ ಅಲಗಟಿ, ನೀಲಕಂಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News