ಕಲಬುರಗಿ | ಡಾ.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಧ್ವಜಾರೋಹಣ ಆರೋಪ : ಮುಖ್ಯ ಶಿಕ್ಷಕ ಅಮಾನತು
ಕಲಬುರಗಿ: ಕಳೆದ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋವನ್ನು ಇಡದೆ ಧ್ವಜಾರೋಹಣ ಮಾಡಿರುವ ಆರೋಪದ ಮೇರೆಗೆ ಓರ್ವ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಅಫಜಲಪುರ ತಾಲ್ಲೂಕಿನ ಬಡದಾಳ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಶೈಲ ಮೇತ್ರಿ ಎಂಬವರು ಅಮಾನತುಗೊಂಡಿದ್ದಾರೆ.
ಆ.15 ರಂದು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಕಾರ್ಯಕ್ರಮ ಮಾಡಲಾಗಿತ್ತು. ಅಲ್ಲದೆ, ಅರ್ಧಕ್ಕೆ ಧ್ವಜಾರೋಹಣ ಮಾಡಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿತ್ತು. ಈ ಕುರಿತಾಗಿ ವಿವಿಧ ಸಂಘಟನೆಗಳ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು.
ಮಹನೀಯರಿಗೆ ಅಗೌರವ ಸೇರಿದರೆ ಸರಕಾರಿ ಆದೇಶಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಸೆ.11 ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿ ಯುವರಾಜ ಭೀಮರಾವ ಗಾಡಿ ಅವರು ಆದೇಶಿಸಿದ್ದಾರೆ.