×
Ad

Kalaburagi | ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಐಎಂಐಎಂ ಮನವಿ

ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕ, ನ್ಯಾಯಯುತವಾಗಿ ನಡೆಸಲು ಒತ್ತಾಯ

Update: 2026-07-02 19:44 IST

ಕಲಬುರಗಿ: ರಾಜ್ಯದಲ್ಲಿ ನಡೆಯಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿತು.

ಮನವಿ ಸಲ್ಲಿಸಿದ ಪಕ್ಷದ ಮುಖಂಡರು, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಸಂವಿಧಾನಾತ್ಮಕ ಹಕ್ಕಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕ, ನ್ಯಾಯಯುತ ಹಾಗೂ ತಾರತಮ್ಯರಹಿತವಾಗಿ ನಡೆಯಬೇಕು ಎಂದು ಒತ್ತಾಯಿಸಿದರು.

ಮತದಾರರ ಪಟ್ಟಿಯ ನಿಖರತೆ ಕಾಪಾಡುವ ಉದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ಅಗತ್ಯವಾಗಿದ್ದರೂ, ಕೇವಲ ಕಾಗುಣಿತ ದೋಷ, ದಾಖಲೆಗಳಲ್ಲಿನ ಸಣ್ಣ ವ್ಯತ್ಯಾಸ ಅಥವಾ ತಾಂತ್ರಿಕ ಕಾರಣಗಳಿಂದ ನೈಜ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಬಾರದು ಎಂದು ಆಗ್ರಹಿಸಿದರು.

ವಿಶೇಷವಾಗಿ ಅನಕ್ಷರಸ್ಥರು, ಹಿರಿಯ ನಾಗರಿಕರು, ಅಂಗವಿಕಲರು, ವಲಸೆ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ದಾಖಲೆಗಳ ಪರಿಶೀಲನೆ ಮತ್ತು ಸಲ್ಲಿಕೆಯಲ್ಲಿ ಅಗತ್ಯ ನೆರವು ಹಾಗೂ ಮಾರ್ಗದರ್ಶನ ಒದಗಿಸಬೇಕು ಎಂದು ಒತ್ತಾಯಿಸಿದರು.

ಯಾವುದೇ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕ್ರಮ ಕೈಗೊಳ್ಳಬೇಕು. ದಾಖಲೆಗಳಲ್ಲಿನ ಸಣ್ಣ ಕಾಗುಣಿತ ಅಥವಾ ತಾಂತ್ರಿಕ ದೋಷಗಳನ್ನು ಆಧಾರವಾಗಿಸಬಾರದು. ಹೆಸರು ಕೈಬಿಡುವ ಮುನ್ನ ಸಂಬಂಧಪಟ್ಟವರಿಗೆ ಪೂರ್ವ ನೋಟಿಸ್ ನೀಡಿ, ವಿವರಣೆ ಸಲ್ಲಿಸಲು ಸಮರ್ಪಕ ಅವಕಾಶ ಕಲ್ಪಿಸಬೇಕು. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತದಾರರಿಗೆ ದಾಖಲೆಗಳ ತಿದ್ದುಪಡಿ ಹಾಗೂ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಸಹಕಾರ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿರಾಜ್ ಶಾಬ್ದಿ, ಅಜರ್ ಮುಬಾರಕ್, ನಜೀರ್ ಅಹ್ಮದ್, ಮೊಯಿನುದ್ದೀನ್, ಡಾ.ಮುಕ್ತರ್, ಆಕಾಶ್ ರಿದ್ಲಾನ್, ಅಬ್ಬಾಸ್ ಗಚ್ಚಿನಮನಿ, ಶೇಖ್ ಆರೀಫ್, ಹಮೀದ್, ಶೇಖ್ ಉಮರ್, ಅಹ್ಮದ್ ಬಬ್ಲು, ಅಜ್ಮತ್ ಖಾದ್ರಿ ಮತ್ತಿತ್ತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News