Kalaburagi | ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿಗೆ ‘ಅಕ್ಕಮಹಾದೇವಿ ರತ್ನ’ ಪ್ರಶಸ್ತಿ
ಕಲಬುರಗಿ: ಶಿಕ್ಷಣ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಗುರುತಿಸಿ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರಿಗೆ ಪ್ರತಿಷ್ಠಿತ ‘ಅಕ್ಕಮಹಾದೇವಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾಜ, ಶಿಕ್ಷಣ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಗಣ್ಯರನ್ನು ಗೌರವಿಸುವ ಉದ್ದೇಶದಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಾರಾಷ್ಟ್ರ ರಾಜ್ಯ ಘಟಕದ ವತಿಯಿಂದ ಭಾನುವಾರ ಮುಂಬೈನ ನಾರಿಮನ್ ಪಾಯಿಂಟ್ನಲ್ಲಿರುವ ಯಶವಂತರಾವ್ ಚವ್ಹಾಣ್ ಸೆಂಟರ್ನಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.
ಕಾಶಿ ಪೀಠದ ಶ್ರೀ 1008 ಜ್ಞಾನಸಿಂಹಾಸನಾಧೀಶ್ವರ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಮಹಾರಾಷ್ಟ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಗಣ್ಯರ ಉಪಸ್ಥಿತಿಯಲ್ಲಿ ಡಾ. ದಾಕ್ಷಾಯಿಣಿ ಅವ್ವಾಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಹಿಳಾ ಸಬಲೀಕರಣ, ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ವಿಶಿಷ್ಟ ಕೊಡುಗೆ, ದಕ್ಷ ನಾಯಕತ್ವ ಮತ್ತು ಗಣನೀಯ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಗೌರವ ನೀಡಲಾಗಿದೆ.
ಇದೇ ಸಂದರ್ಭದಲ್ಲಿ ಡಾ. ಪ್ರಭಾಕರ ಕೋರೆ ಅವರಿಗೆ ‘ವೀರಶೈವ ರತ್ನ’, ಬೆಂಗಳೂರಿನ ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ಅವರಿಗೆ ‘ಬಸವ ರತ್ನ’, ಜಗದೀಶ ಶೆಟ್ಟರ್ ಅವರಿಗೆ ‘ವೀರಶೈವ ಭೂಷಣ’, ಮಾಜಿ ಶಾಸಕ ಅಶೋಕ್ ಖೇಣಿ ಅವರಿಗೆ ‘ಪಂಚಾಚಾರ್ಯ ರತ್ನ’ ಹಾಗೂ ಪಂಢರಪುರ ದೇವಾಲಯದ ಅಧ್ಯಕ್ಷ ಗಹಿನಿನಾಥ ಮಹಾರಾಜ್ ಔಸೆಕರ್ ಅವರಿಗೆ ‘ವಿಠ್ಠಲ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಈಶ್ವರ ಬಿ. ಖಂಡ್ರೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ವಿಧಾನಸಭೆಯ ಸಭಾಧ್ಯಕ್ಷ ರಾಹುಲ್ ನಾರ್ವೇಕರ್, ಕೇಂದ್ರದ ಮಾಜಿ ಸಚಿವ ಸುಶೀಲಕುಮಾರ್ ಶಿಂಧೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಿಳಾ ಸಮಿತಿಯ ಅಧ್ಯಕ್ಷೆ ಉಮಾ ಬಿ. ನಾಯಕ್, ಮಹಾಸಭಾದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ವಿಶ್ವನಾಥ ಬಿ. ಚಕೋಟೆ, ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್ನ ಕುಲಾಧಿಪತಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಆಳಂದ ಶಾಸಕ ಬಿ.ಆರ್. ಪಾಟೀಲ, ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಮಾಜಿ ಮಹಾಪೌರ ಹಾಗೂ ಮಹಾಸಭಾದ ಕಲಬುರಗಿ ಘಟಕದ ಅಧ್ಯಕ್ಷ ಶರಣು ಮೋದಿ, ಕರ್ನಾಟಕ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ್, ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವೆ ಡಾ. ಲಕ್ಷ್ಮೀ ಪಾಟೀಲ ಮಾಕಾ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.