Kalaburagi | ಕನ್ನಡಪರ, ರೈತಪರ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಆನಂದ ಎಸ್. ದೊಡ್ಡಮನಿ ಆಗ್ರಹ
ಕಲಬುರಗಿ : ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಎಸ್. ದೊಡ್ಡಮನಿ ಅವರು, ನೆಲ, ಜಲ, ಭಾಷೆ ಹಾಗೂ ರೈತರ ಹಕ್ಕುಗಳ ರಕ್ಷಣೆಗೆ ಹೋರಾಟ ನಡೆಸುತ್ತಿರುವ ಕನ್ನಡಪರ ಮತ್ತು ರೈತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಮೇಲಿನ ಪೊಲೀಸ್ ಪ್ರಕರಣಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಬೇಷರತ್ತಾಗಿ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿ ಯಲ್ಲಿ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕನ್ನಡ ನಾಡಿನ ಅಸ್ಮಿತೆ, ಗಡಿ ರಕ್ಷಣೆ, ಮಹದಾಯಿ ಹಾಗೂ ಕಾವೇರಿ ನೀರಿನ ಹಂಚಿಕೆ, ರೈತರ ಸಾಲಮನ್ನಾ ಮತ್ತು ಬೆಂಬಲ ಬೆಲೆ ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳಿಗಾಗಿ ಕನ್ನಡಪರ ಹಾಗೂ ರೈತಪರ ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹೋರಾಟಗಾರರು ವೈಯಕ್ತಿಕ ಲಾಭಕ್ಕಾಗಿ ಅಲ್ಲದೆ ಸಮಾಜ ಮತ್ತು ರಾಜ್ಯದ ಹಿತದೃಷ್ಟಿಯಿಂದ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಹೋರಾಟ ಮಾಡುತ್ತಿದ್ದು, ಇಂತಹ ನ್ಯಾಯಸಮ್ಮತ ಚಳವಳಿಗಳನ್ನು ಹತ್ತಿಕ್ಕುವ ಉದ್ದೇಶದಿಂದ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ರದ್ದುಪಡಿಸುವುದು ತನ್ನ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.