×
Ad

Kalaburagi | ಬರ ಪರಿಹಾರ, ಸ್ಮಾರ್ಟ್ ಸಿಟಿಗೆ 1,600 ಕೋಟಿ ರೂ. ಅನುದಾನಕ್ಕೆ ಸಿಎಂಗೆ ಮನವಿ

Update: 2026-07-08 20:31 IST

ಕಲಬುರಗಿ: ಸೂಪರ್ ಎಲ್‌ನಿನೋ ಪರಿಣಾಮದಿಂದ ತೀವ್ರ ಬರಗಾಲ ಎದುರಿಸುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಹಾಗೂ ಕಲಬುರಗಿ ಸ್ಮಾರ್ಟ್ ಸಿಟಿ ಯೋಜನೆಗೆ 1,600 ಕೋಟಿ ರೂ. ಅನುದಾನ ಮಂಜೂರು ಮಾಡಬೇಕು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಕಲಬುರಗಿ ಸರ್ಕಾರಿ ಅತಿಥಿಗೃಹ ‘ಐವಾನ್-ಎ-ಶಾಹಿ’ಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಶಾಸಕ ಅಲ್ಲಂಪ್ರಭು ಪಾಟೀಲ್, ಶಾಸಕಿ ಖನೀಜ್ ಫಾತೀಮಾ ಹಾಗೂ ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ ಅವರು ಬರ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಮನವಿಪತ್ರ ಸಲ್ಲಿಸಿದರು.

ಜಿಲ್ಲೆಯಲ್ಲಿ ಶೇ.40ರಷ್ಟು ಮಳೆಯ ಕೊರತೆಯಿಂದ ಹೆಸರು, ಉದ್ದು ಹಾಗೂ ಅಲಸಂದೆ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ತಕ್ಷಣ ಪರಿಹಾರ ನೀಡುವುದರ ಜೊತೆಗೆ ಬೆಳೆ ವಿಮೆಯ ಎರಡನೇ ಕಂತನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರತಿ ಹೋಬಳಿಯಲ್ಲಿ ಮೇವು ಬ್ಯಾಂಕ್ ಆರಂಭಿಸಬೇಕು. ಕಲಬುರಗಿ ನಗರದ ಕುಡಿಯುವ ನೀರಿನ ಮೂಲವಾದ ಭೀಮಾ ನದಿಗೆ ನಾರಾಯಣಪುರ ಜಲಾಶಯದಿಂದ ಕನಿಷ್ಠ 3 ಟಿಎಂಸಿ ನೀರು ಹರಿಸಬೇಕು. ಜೊತೆಗೆ ತುರ್ತು ನೀರು ಪೂರೈಕೆಗೆ 1,850 ಕೋಟಿ ರೂ. ವೆಚ್ಚದ ಕಾಲುವೆ ಯೋಜನೆಗೆ ಸರ್ಕಾರ ಅನುಮೋದನೆ ನೀಡಿ ಕಾಮಗಾರಿ ಆರಂಭಿಸಬೇಕು ಎಂದು ಮನವಿ ಮಾಡಿದರು.

ಮಹಾರಾಷ್ಟ್ರ ರಾಜ್ಯ ಭೀಮಾ ನದಿಯ ಪಾಲಿನ 15 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಳಸುತ್ತಿದ್ದು, ಕರ್ನಾಟಕಕ್ಕೆ ಸಿಗಬೇಕಾದ ನೀರಿನ ಹಕ್ಕನ್ನು ಸರ್ಕಾರ ಸಮರ್ಥವಾಗಿ ಪ್ರತಿಪಾದಿಸಬೇಕು. ಇದರಿಂದ ಭವಿಷ್ಯದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News