Kalaburagi | 29,306 ನೈಜ ತಳವಾರರಿಗೆ ಪ್ರಮಾಣ ಪತ್ರ ವಿತರಣೆ: ತಿಪ್ಪಣ್ಣಪ್ಪ ಕಮಕನೂರ
ಕಲಬುರಗಿ: ಜಿಲ್ಲೆಯಲ್ಲಿ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ವಿತರಣೆ ನಿಂತಿಲ್ಲ. 2020ರಿಂದ ಇವರೆಗೆ ಸುಮಾರು 29,306 ನೈಜ ಫಲಾನುಭವಿಗಳಿಗೆ ಪ್ರಮಾಣ ಪತ್ರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಳವಾರರಿಗೆ ಪ್ರಮಾಣ ಪತ್ರ ನೀಡುತ್ತಿಲ್ಲ ಎಂಬ ಆರೋಪ ಸರಿಯಲ್ಲ. ಕಳೆದ ಎರಡು ವರ್ಷಗಳಲ್ಲಿ ಮಾತ್ರವೇ ಸುಮಾರು 15 ಸಾವಿರ ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ನೈಜ ತಳವಾರರಿಗೆ ಪ್ರಮಾಣ ಪತ್ರ ದೊರೆಯದಿದ್ದರೆ ಮಾಹಿತಿ ನೀಡುವಂತೆ ಮನವಿ ಮಾಡಿದ ಅವರು, ಅಂತಹವರಿಗೆ ಪ್ರಮಾಣ ಪತ್ರ ದೊರಕಿಸುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ಪ್ರಭಾವದಿಂದ ಪ್ರಮಾಣ ಪತ್ರ ವಿತರಣೆ ನಿಲ್ಲಿಸಲಾಗಿದೆ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದರು. ಸಚಿವರು ಸ್ವತಃ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಸಮಾಜದ ಮುಖಂಡರೊಂದಿಗೆ ಚರ್ಚೆ ಮಾಡಿ ಸಮಸ್ಯೆ ಪರಿಹಾರಕ್ಕೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಪ್ರತಿಭಟನೆ ನಡೆಸುವುದು ಯಾರೂ ವಿರೋಧಿಸುವುದಿಲ್ಲ. ಆದರೆ ಅದರ ಹೆಸರಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಅವಹೇಳನ ಮಾಡುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಎಲ್ಲರೂ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವಿಚಾರದಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣವನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಮೇಶ ನಾಟೀಕಾರ, ವಿಜಯಕುಮಾರ ಇದ್ದರು.