ಕಲಬುರಗಿ | ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿಎಂ ಆಗಮನ : ಕಾರ್ಯಕ್ರಮ ಯಶಸ್ಸಿಗೆ ಡಿಸಿ ಕರೆ
ಕಲಬುರಗಿ: ಸೆ.17 ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು-ಸಂಸದರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು.
ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಸೆ.17 ರಂದು ಬೆಳಿಗ್ಗೆ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಮುಖ್ಯಮಂತ್ರಿಗಳು ತದನಂತರ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು ಎಂದು ಮುಖ್ಯಮಂತ್ರಿಗಳ ಪ್ರವಾಸದ ವಿವರ ಹಂಚಿಕೊಂಡರು.
ಶಿಷ್ಠಚಾರದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಪರೇಡ್ ಮೈದಾನ, ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತ ಸೇರಿದಂತೆ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಮತ್ತು ಪೊಲೀಸ್ ಭದ್ರತೆ ಒದಗಿಸಬೇಕು. ವಿಶೇಷವಾಗಿ ಕಲಬುರಗಿ ನಗರದ ಪ್ರಮುಖ ವೃತ್ತಗಳನ್ನು ದೀಪಾಲಂಕಾರಗೊಳಿಸಬೇಕು. ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದ್ದು, ಅದರಂತೆ ಅಧಿಕಾರಿಗಳು ಯಾವುದೇ ಕರ್ತವ್ಯ ಲೋಪಕ್ಕೆ ಅವಕಾಶ ನೀಡದೆ ಕಾರ್ಯನಿರ್ವಹಿಸಬೇಕು ಎಂದರು.
ಸೆ.17ರ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆ ಮತ್ತು ಪ್ರದೇಶದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಸೌಲಭ್ಯ ವಿತರಣೆ ಕಾರ್ಯಕ್ರಮ ಆಯೋಜಿಸಬೇಕಿದಲ್ಲಿ ಶನಿವಾರದೊಳಗೆ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಕೊನೆ ಕ್ಷಣದಲ್ಲಿ ಕಾರ್ಯಕ್ರಮ ಸೇರ್ಪಡೆಗೆ ಇಲ್ಲಿ ಅವಕಾಶ ಇಲ್ಲ ಎಂದು ಅಧಿಕಾರಿಗಳಿಗೆ ಅವರು ಸ್ಪಷ್ಟಪಡಿಸಿದರು.
ಸ್ಥಬ್ದಚಿತ್ರಗಳು ಆಕರ್ಷಕವಾಗಿರಲಿ :
ಆಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ, ಅರಣ್ಯ ಆವಿಷ್ಕಾರ, ಪ್ರಜಾ ಸೌಧ, ಅರಿವು ಕೇಂದ್ರ, ಮಾದರಿ ವಸತಿ ನಿಲಯಗಳು ಹೀಗೆ ಸುಮಾರು 11 ವಿಷಯಗಳ ಮೇಲೆ ವಿವಿಧ ಇಲಾಖೆಗಳು ಆಕರ್ಷಕ ಸ್ಥಬ್ದಚಿತ್ರಗಳನ್ನು ಪ್ರದರ್ಶಿಸಬೇಕು. ಪ್ರತಿ ಸ್ಥಬ್ದಚಿತ್ರಗಳ ಮುಂದೆ ಪ್ರದೇಶದ ಕಲಾವಿದರಿಂದ ಕಲಾ ಪ್ರದರ್ಶನ ಆಯೋಜಿಸಬೇಕು ಎಂದರು.
ಮುಖ್ಯಮಂತ್ರಿಗಳು ಬರುತ್ತಾರೆಂದರೆ ಸಾರ್ವಜನಿಕರು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿ ತಮ್ಮ ಕೆಲಸ ಆಗಿಲ್ಲ ಎಂದು ಅರ್ಜಿ ಹಿಡಿದುಕೊಂಡು ಬರುವುದು ಸಾಮಾನ್ಯವಾಗಿದೆ. ಇದನ್ನು ತಪ್ಪಿಸಲು ತಮ್ಮ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಸ್ವೀಕೃತ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಅಧಿಕಾರಿ ವರ್ಗದಿಂದಾಗಬೇಕು ಎಂದು ಡಿಸಿ ಬಿ.ಫೌಝಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಅಯುಕ್ತೆ ಸಾಹಿತ್ಯ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.