ಕಲಬುರಗಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದಲ್ಲಿ ದಾಖಲಿಸಿರುವ ಎಫ್‌ಐಆರ್ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಅನ್ನಪೂರ್ಣ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಟೌನ್‌ಹಾಲ್‌ವರೆಗೆ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಉತ್ತರಾಖಂಡ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಟೈರ್‌ಗೆ ಬೆಂಕಿ ಹಚ್ಚಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿದ ಘಟನೆ ಕುರಿತು ಪ್ರಶ್ನಿಸಿದ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.

ಭಾಷಣ ನಡೆದ ಸ್ಥಳವನ್ನು ಶುದ್ಧೀಕರಿಸಿದವರ ವಿರುದ್ಧವೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಈ ಕುರಿತು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಪ್ರಮುಖ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ ಜಗದೇವ ಗುತ್ತೇದಾರ್, ಉತ್ತರಾಖಂಡ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಆಳಂದ ಶಾಸಕ ಬಿ.ಆರ್. ಪಾಟೀಲ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಅಧ್ಯಕ್ಷ ಮಝಾರ್ ಖಾನ್ ಆಲಂ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಸಿಂಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ಮಹಾಂತೇಶ ಕೌಲಗಿ, ಯುವ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಅಹಮದ್ ಅಂಗಡಿ, ಶಿವಾನಂದ ಮರ್ತೂರು, ಪ್ರವೀಣ್ ಪಾಟೀಲ್ ಹರವಾಳ, ಕಿರಣ್ ದೇಶಮುಖ, ಶಿವು ಹೊನಗುಂಟಿ, ಈರಣ್ಣ ಝಳಕಿ, ಶ್ಯಾಮ ನಾಟಿಕಾರ, ಶ್ವೇತಾ ಗಾಜರೆ, ವಾಣಿಶ್ರೀ ಸಗರಕರ, ಸಂತೋಷ್ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor