Kalaburagi | ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆಯ ಸಹಕಾರ ಅಗತ್ಯ: ಡಾ.ಎಸ್.ಡಿ.ಶರಣಪ್ಪ ಕರೆ
ವ್ಯಸನ ಮುಕ್ತ ದಿನಾಚರಣೆ
ಕಲಬುರಗಿ: ಇಂದಿನ ಡಿಜಿಟಲ್ ಯುಗದಲ್ಲಿ ಯುವಜನತೆ ದುಶ್ಚಟಗಳು ಹಾಗೂ ಡಿಜಿಟಲ್ ತಂತ್ರಜ್ಞಾನದ ದುರ್ಬಳಕೆಯಿಂದ ದೂರವಿದ್ದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಕರೆ ನೀಡಿದರು.
ನಗರದ ಆದರ್ಶ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಇಲಾಖೆ, ಆರೋಗ್ಯ ಇಲಾಖೆ, ಜಿಮ್ಸ್ ಆಸ್ಪತ್ರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶ್ರೀ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕವನ್ನು ಹಾಗೂ ಕಲಬುರಗಿ ನಗರವನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ‘ಆಪರೇಷನ್ ರೈಸ್ (RISE – Refuse, Inform, Support, Eliminate)’ ಹಾಗೂ ‘ಬೇಡ ಬ್ರೋ’ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಂಡಿದೆ. ಆದರೆ ಕೇವಲ ಪೊಲೀಸ್ ಇಲಾಖೆಯಿಂದಲೇ ಮಾದಕ ವಸ್ತುಗಳ ನಿರ್ಮೂಲನೆ ಸಾಧ್ಯವಿಲ್ಲ. ಯುವಜನತೆ, ಸಮುದಾಯ ಹಾಗೂ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.
ಶ್ರೀ ಮಹಾಂತ ಶಿವಯೋಗಿಗಳು ಕೇವಲ ಆಧ್ಯಾತ್ಮಿಕ ವ್ಯಕ್ತಿಯಾಗಿರದೆ ಸಮಾಜ ಸುಧಾರಕರಾಗಿದ್ದರು. ದುಶ್ಚಟಗಳಿಂದ ವ್ಯಕ್ತಿ, ಕುಟುಂಬ ಹಾಗೂ ದೇಶದ ಮೇಲೆ ಉಂಟಾಗುವ ದುಷ್ಪರಿಣಾಮಗಳ ವಿರುದ್ಧ ಅವರು ಹೋರಾಡಿದ್ದರು. ಇಂದಿಗೂ ಅವರ ಚಿಂತನೆಗಳು ಪ್ರಸ್ತುತವಾಗಿದ್ದು, ಯುವ ಸಮುದಾಯವನ್ನು ವ್ಯಸನಗಳಿಂದ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಮೊಬೈಲ್, ಸಾಮಾಜಿಕ ಜಾಲತಾಣ ಹಾಗೂ ಒಟಿಟಿ ವೇದಿಕೆಗಳ ಅತಿಯಾದ ಬಳಕೆ (ಡಿಜಿಟಲ್ ಟಾಕ್ಸಿಸಿಟಿ) ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಧಕ್ಕೆಯಾಗುತ್ತಿದೆ. ತಂಬಾಕು, ಮದ್ಯಪಾನ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಯುವಜನತೆ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳಬಾರದು ಎಂದು ಸಲಹೆ ನೀಡಿದರು.
ಮಾದಕ ವಸ್ತುಗಳ ವಿರುದ್ಧ ‘ತಡೆಗಟ್ಟುವಿಕೆ (Prevention), ಪತ್ತೆ ಹಚ್ಚುವಿಕೆ (Detection) ಮತ್ತು ಪುನರ್ವಸತಿ (Rehabilitation)’ ಎಂಬ ತ್ರಿಸೂತ್ರದಡಿ ಕಾರ್ಯನಿರ್ವಹಿಸಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ವ್ಯಸನಮುಕ್ತ ಸಮಾಜದ ರಾಯಭಾರಿಯಾಗಬೇಕು. ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟದಂತಹ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ 112 ತುರ್ತು ಸಹಾಯವಾಣಿಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.
3 ವರ್ಷದಲ್ಲಿ 700ಕ್ಕೂ ಹೆಚ್ಚು ಪ್ರಕರಣ :
ಕಲಬುರಗಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ 700ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈವರೆಗೆ ಮುಖ್ಯವಾಗಿ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿತ್ತು. ಇನ್ನು ಮುಂದೆ ಮಾದಕ ವಸ್ತು ಸೇವಿಸುವವರ ಮೇಲೆಯೂ ಕಾನೂನು ಪ್ರಕಾರ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಎಚ್ಚರಿಕೆ ನೀಡಿದರು.
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮನೋವೈದ್ಯ ಡಾ. ಪ್ರಭು ಕಿರಣ್ ಮಾತನಾಡಿ, ಯುವ ವಯಸ್ಸಿನಲ್ಲಿ ಮೆದುಳು ಅತ್ಯಂತ ಚುರುಕಾಗಿರುತ್ತದೆ. ಅದನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸಿಕೊಂಡರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಆದರೆ ಇದೇ ವಯಸ್ಸಿನಲ್ಲಿ ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯೋಜಕಿ ಸುಜಾತಾ ಪಾಟೀಲ ವ್ಯಸನ ತ್ಯಜಿಸುವ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಾಮಾಜಿಕ ಕಾರ್ಯಕರ್ತ ನಾಗರಾಜ ಬಿರಾದಾರ ತಂಬಾಕು ನಿಯಂತ್ರಣ ಸಹಾಯವಾಣಿ ಕುರಿತು ಮಾಹಿತಿ ನೀಡಿದರು.
ಜಾಗೃತಿ ಜಾಥಕ್ಕೆ ಚಾಲನೆ :
ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆಯಿಂದ ಜಗತ್ ವೃತ್ತದವರೆಗೆ ಜಾಗೃತಿ ಜಾಥೆ ಆಯೋಜಿಸಲಾಗಿತ್ತು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಅಸ್ನಾ ರಬಾ ರುಕಿಯಾ ಜಾಥೆಗೆ ಚಾಲನೆ ನೀಡಿದರು. ಜಾಥೆಯಲ್ಲಿ ಭಾಗವಹಿಸಿದ ನರ್ಸಿಂಗ್ ವಿದ್ಯಾರ್ಥಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣದ ಪರ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.