Kalaburagi | ಜನಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುದ್ರವಾಡಿಯಲ್ಲಿ ಸಿಪಿಐ ಪ್ರತಿಭಟನೆ

Update: 2026-08-06 18:34 IST

ಆಳಂದ: ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ರಾಷ್ಟ್ರೀಯ ಮಂಡಳಿಯ ಕರೆಯ ಮೇರೆಗೆ ಹಮ್ಮಿಕೊಂಡಿರುವ “ರಾಷ್ಟ್ರ ರಾಜಕೀಯ ಬದಲಾವಣೆ ಅಭಿಯಾನ” ಅಂಗವಾಗಿ ಗುರುವಾರ ರುದ್ರವಾಡಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ ವಿವಿಧ ಜನಪರ ಹಾಗೂ ಸ್ಥಳೀಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.

ಅಭಿಯಾನದ ಅಂಗವಾಗಿ ಬಂಗರಗಾ ಗ್ರಾಮದಿಂದ ರುದ್ರವಾಡಿವರೆಗೆ ಸುಮಾರು ಮೂರು ಕಿಲೋಮೀಟರ್ ಪಾದಯಾತ್ರೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಗ್ರಾಮದ ಹಿರಿಯ ಮುಖಂಡ ಚಂದ್ರಕಾಂತ ಖೋಬ್ರೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು, ಗುಣಮಟ್ಟದ ಸಾರ್ವತ್ರಿಕ ಆರೋಗ್ಯ ಹಾಗೂ ಶಿಕ್ಷಣ ವ್ಯವಸ್ಥೆ ಒದಗಿಸಬೇಕು, ಮಹಿಳಾ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಭರವಸೆ ನೀಡಬೇಕು. ದಲಿತರು ಹಾಗೂ ಆದಿವಾಸಿಗಳ ಮೇಲಿನ ದೌರ್ಜನ್ಯ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಮತದಾನ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರವ್ಯಾಪಿ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಗ್ರಾಮ ಪಂಚಾಯಿತಿ ಮಟ್ಟದವರೆಗೆ ಪಾದಯಾತ್ರೆ ನಡೆಸಲಾಗುತ್ತಿದ್ದು, ಸೆಪ್ಟೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖಂಡರು ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಸರ್ಕಾರಿ ಶಾಲೆಗಳಲ್ಲಿನ ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿ, ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ತಕ್ಷಣ ಬಿಡುಗಡೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಜಿಲ್ಲಾ ಮಂಡಳಿ ಖಜಾಂಚಿ ಭೀಮಾಶಂಕರ ಮಾಡಿಯಾಳ, ರಾಜ್ಯ ಮಂಡಳಿ ಸದಸ್ಯ ಮೌಲಾ ಮುಲ್ಲಾ, ತಾಲೂಕು ಕಾರ್ಯದರ್ಶಿ ಆಸ್ಪಕ್ ಮುಲ್ಲಾ, ಕಿಸಾನ್ ಸಭಾ ತಾಲೂಕು ಅಧ್ಯಕ್ಷ ಧರ್ಮಣ್ಣ ಪೂಜಾರಿ, ಗೌರವಾಧ್ಯಕ್ಷ ಚಂದ್ರಕಾಂತ ಖೋಬ್ರೆ, ಉಪಾಧ್ಯಕ್ಷ ಮಹಾದೇವ ಪೂಜಾರಿ ಮಂಟಗಿ, ಸಿಪಿಐ ಕಲಬುರಗಿ ನಗರ ಕಾರ್ಯದರ್ಶಿ ಸಾಜೀದ್ ಅಹ್ಮದ್, ಲಕ್ಷ್ಮೀಬಾಯಿ, ಕಾರ್ಮಿಕ ಸಂಘಟನೆಯ ಕಲ್ಯಾಣಿ ತುಕಾಣಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News