ಮಹಿಳಾ, ಮಕ್ಕಳ ಕಲ್ಯಾಣ ಯೋಜನೆಗಳು ಕಾಗದಕ್ಕಷ್ಟೇ ಸೀಮಿತವಾಗದಿರಲಿ: ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್

Update: 2026-08-13 20:53 IST

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳು ಕೇವಲ ಕಾಗದದ ವರದಿಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾಗೃತಿ ಕಾರ್ಯಕ್ರಮಗಳು ಕೇವಲ ಸಭಾಂಗಣಕ್ಕೆ ಸೀಮಿತವಾಗಬಾರದು. ಪ್ರತಿಯೊಂದು ಕಾರ್ಯಕ್ರಮದಲ್ಲೂ ಕನಿಷ್ಠ 100ಕ್ಕೂ ಹೆಚ್ಚು ಜನರು ಭಾಗವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ವೈಯಕ್ತಿಕ ಜವಾಬ್ದಾರಿ ವಹಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಹಾಗೂ ಶಾಲಾ-ಕಾಲೇಜು ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಜಾಗೃತಿ ಕಾರ್ಯಕ್ರಮಗಳು ಕೇವಲ ಕಾಗದದ ವರದಿಗಳಿಗೆ ಸೀಮಿತವಾಗಿರುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರತಿಯೊಂದು ಜಾಗೃತಿ ಕಾರ್ಯಕ್ರಮದಲ್ಲೂ ಕನಿಷ್ಠ 100ಕ್ಕೂ ಹೆಚ್ಚು ಸಾರ್ವಜನಿಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವುದನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಖಾತರಿಪಡಿಸಬೇಕು. ಕಾರ್ಯಕ್ರಮದ ಉದ್ದೇಶ ಹಾಗೂ ಇಲಾಖೆಯ ಯೋಜನೆಗಳ ಪ್ರಯೋಜನಗಳು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದರು.

ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯಕ್ರಮಗಳ ನೈಜತೆಯನ್ನು ದೃಢಪಡಿಸಲು ಜಿಪಿಎಸ್ ಆಧಾರಿತ, ಸಮಯ ಮತ್ತು ದಿನಾಂಕ ನಮೂದಾಗಿರುವ ಛಾಯಾಚಿತ್ರಗಳೊಂದಿಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅಧಿಕಾರಿಗಳ ದೈನಂದಿನ ಹಾಜರಾತಿಯನ್ನು ‘ಕರ್ತವ್ಯ’ ಆಪ್‌ನಲ್ಲಿ ಕಡ್ಡಾಯವಾಗಿ ನಿಖರವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಸಾಂತ್ವನ ಕೇಂದ್ರಗಳು ಹಾಗೂ ‘ಶಕ್ತಿ ಸದನ’ಗಳ (ಸ್ವಾಧಾರ್ ಗೃಹ) ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಮುಂದಿನ 15 ದಿನಗಳೊಳಗಾಗಿ ಎಲ್ಲ ಕೇಂದ್ರಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಿಸಿಟಿವಿ ದೃಶ್ಯಗಳ ಲೈವ್‌ಸ್ಟ್ರೀಮಿಂಗ್ ಅನ್ನು ಮೇಲಾಧಿಕಾರಿಗಳ ಮೊಬೈಲ್‌ಗೆ ಸಂಪರ್ಕ ಕಲ್ಪಿಸದ ಕೇಂದ್ರಗಳ ಅನುದಾನವನ್ನು ತಡೆಹಿಡಿಯಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಸ್ತುತ ಖಾಸಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸ್ವಾಧಾರ್ ಗೃಹ’ವನ್ನು ಸೂಕ್ತ ಸರ್ಕಾರಿ ಸ್ವಂತ ಕಟ್ಟಡಕ್ಕೆ ತಕ್ಷಣವೇ ಸ್ಥಳಾಂತರಿಸುವಂತೆ ಸೂಚಿಸಿದರು. ಇದರಿಂದ ಸರ್ಕಾರದ ಹಣ ಉಳಿತಾಯವಾಗುವುದರ ಜತೆಗೆ ನಿವಾಸಿಗಳಿಗೆ ಉತ್ತಮ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಶಾರೀರಿಕ ಬೆಳವಣಿಗೆ ಹಾಗೂ ಅಪೌಷ್ಟಿಕತೆ ಅಳೆಯಲು ಬಳಸಲಾಗುವ ತೂಕದ ಯಂತ್ರಗಳು, ಸ್ಟೇಡಿಯೋಮೀಟರ್ ಹಾಗೂ ಇನ್ಫಾಂಟೋಮೀಟರ್ ಉಪಕರಣಗಳ ಸ್ಥಿತಿಗತಿಯನ್ನು ತಕ್ಷಣ ಪರಿಶೀಲಿಸಬೇಕು. ಕೆಟ್ಟುಹೋಗಿರುವ ಉಪಕರಣಗಳ ಪಟ್ಟಿಯನ್ನು ಸಿದ್ಧಪಡಿಸಿ, ಹೊಸ ಉಪಕರಣಗಳ ಖರೀದಿಗೆ ಅಗತ್ಯ ವರದಿ ಸಲ್ಲಿಸುವಂತೆ ಡಿ.ಸಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಸಹಾಯವಾಣಿ 181 ಹಾಗೂ ಮಕ್ಕಳ ಸಹಾಯವಾಣಿ 1098 ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಅಗತ್ಯ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಸಹಾಯವಾಣಿ ಸೇವೆಗಳನ್ನು ಬಳಸಿಕೊಳ್ಳುವಂತೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಪೌಷ್ಟಿಕಾಂಶ ಮತ್ತು ಆರೋಗ್ಯ ಸುಧಾರಣೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಜಾರಿಯಲ್ಲಿದೆ. ಯೋಜನೆಯಡಿ ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ಒಟ್ಟು ರೂ. 5,000 ಹಾಗೂ ಎರಡನೇ ಮಗು ಹೆಣ್ಣಾಗಿದ್ದರೆ ಒಂದೇ ಕಂತಿನಲ್ಲಿ ರೂ.6,000 ಧನಸಹಾಯ ನೀಡಲಾಗುತ್ತದೆ. ಈ ಮೊತ್ತವನ್ನು ನೇರವಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಸರ್ಕಾರಿ ನೌಕರರು ಹಾಗೂ ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ, ಉಳಿದ ಅರ್ಹ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯಬಹುದು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಮಾಹಿತಿ ತಲುಪಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸೇಡಂ ಉಪವಿಭಾಗದ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್, ಡಿಯುಡಿಸಿ ಯೋಜನಾ ನಿರ್ದೇಶಕ ಮುನ್ನವರ ದೌವಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರಣಬಸಪ್ಪ ಕ್ಯಾತ್ನಾಳ, ಜಿಲ್ಲಾ ಸರ್ಜನ್ ಡಾ. ರೂಕಿಯ್ಯಾ ಅಸ್ನ ರಬಾ, ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಿಡಿಪಿಒಗಳು, ಎನ್‌ಜಿಒ ಪ್ರತಿನಿಧಿಗಳು ಹಾಗೂ ವಿವಿಧ ಯೋಜನೆಗಳ ಮಿಷನ್ ಕೋಆರ್ಡಿನೇಟರ್‌ಗಳು ಉಪಸ್ಥಿತರಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News