×
Ad

Kalaburagi | ವಚನ ಸಾಹಿತ್ಯಕ್ಕೆ ಮರುಚೈತನ್ಯ ಕೊಟ್ಟ ಡಾ.ಫ.ಗು.ಹಳಕಟ್ಟಿ : ಡಾ.ಮಲ್ಲಿಕಾರ್ಜುನ ವಡ್ಡನಕೇರಿ

2026ನೇ ಸಾಲಿನ ಡಾ ಫ.ಗು.ಹಳಕಟ್ಟಿ ಪ್ರಶಸ್ತಿ ಪ್ರದಾನ

Update: 2026-07-04 21:03 IST

ಕಲಬುರಗಿ: ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯವನ್ನು ಸಂರಕ್ಷಿಸಿ, ಸಂಗ್ರಹಿಸಿ ಹಾಗೂ ಪ್ರಕಟಿಸುವ ಮೂಲಕ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ಹೊಸ ಜೀವ ತುಂಬಿದ ಮಹಾನ್ ಸಂಶೋಧಕರಾಗಿದ್ದಾರೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ನಗರದ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಡಾ. ಫ.ಗು. ಹಳಕಟ್ಟಿ ಅವರ ಬದುಕು-ಸಾಧನೆ ಕುರಿತ ವಿಚಾರಗೋಷ್ಠಿ ಹಾಗೂ 2026ನೇ ಸಾಲಿನ ಡಾ. ಫ.ಗು. ಹಳಕಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹಳ್ಳಿಹಳ್ಳಿಗೆ ಸಂಚರಿಸಿ ವಚನಗಳನ್ನು ಸಂಗ್ರಹಿಸಿ, ಸಂಶೋಧಿಸಿ ಪ್ರಕಟಿಸುವ ಮೂಲಕ ಹಳಕಟ್ಟಿ ಅವರು ಅಮೂಲ್ಯ ಸಾಹಿತ್ಯ ಪರಂಪರೆಯನ್ನು ಉಳಿಸಿದ್ದಾರೆ. “ಗೋಳ ಗುಮ್ಮಟಕ್ಕಿಂತ ವಚನ ಗುಮ್ಮಟ ನೋಡಲು ಬಂದಿರುವೆ” ಎಂಬ ಬಿ.ಎಂ. ಶ್ರೀ ಅವರ ಮಾತುಗಳು ವಚನ ಸಾಹಿತ್ಯದ ಮಹತ್ವಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. ಯುವಪೀಳಿಗೆಗೆ ವಚನ ಸಾಹಿತ್ಯದ ಮಹತ್ವವನ್ನು ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ವಚನ ಸಾಹಿತ್ಯವನ್ನು ಬೆಳಕಿಗೆ ತರುವಲ್ಲಿ ಹಳಕಟ್ಟಿ ಅವರ ಶ್ರಮ ಅಪಾರವಾಗಿದ್ದು, ಒಂದು ವಿಶ್ವವಿದ್ಯಾಲಯ ಮಾಡಬಹುದಾದ ಕಾರ್ಯವನ್ನು ಅವರು ಏಕಾಂಗಿಯಾಗಿ ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ವೈಚಾರಿಕ ನೆಲೆಯಲ್ಲಿ ಬದುಕು ರೂಪಿಸಿಕೊಂಡ ಅವರ ಸಾಧನೆ ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿದೆ ಎಂದು ಹೇಳಿದರು.

ಶರಣ ಚಿಂತಕಿ ಜಯಶ್ರೀ ಚಟ್ನಳ್ಳಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶರಣ ಸಾಹಿತ್ಯ ಪರಿಷತ್ತು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುತ್ತಿದ್ದು, ವಚನ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಎಪಿಎಂಸಿ ಅಧ್ಯಕ್ಷ ಮಂಜುನಾಥ ಅಂಜುಟಗಿ, ಶರಣ ಚಿಂತಕಿ ಜಯಶ್ರೀ ಚಟ್ನಳ್ಳಿ, ಅಫಜಲಪುರ ಭಾರತೀಯ ಬಸವ ಬಳಗದ ಮಹೇಶ ಆಲೇಗಾಂವ, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ವಚನ ಸಾಹಿತ್ಯದ ಮಹತ್ವ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ 2026ನೇ ಸಾಲಿನ ಡಾ. ಫ.ಗು. ಹಳಕಟ್ಟಿ ಪ್ರಶಸ್ತಿಯನ್ನು ಶರಣ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಚಿದಂಬರರಾವ ಪಾಟೀಲ ಮರಗುತ್ತಿ, ಬೈಲಪ್ಪ ನೇದಲಗಿ (ನೆಲೋಗಿ), ಪ್ರೊ. ಶಿವರಾಜ ಪಾಟೀಲ, ಬಂಡಪ್ಪ ಕೇಸೂರ, ಜಗನ್ನಾಥ ರಾಚೋಟ್ಟಿ, ಕಮಲಾ ಬಿ. ಪಾಟೀಲ (ಹೇರೂರ), ಅಶೋಕ ಘೂಳಿ, ಡಾ. ಶ್ರೀಮಂತ ಹೋಳಕರ್, ಡಾ. ಆನಂದ ಸಿದ್ಧಾಮಣಿ ಸೇರಿದಂತೆ ಹಲವು ಗಣ್ಯರಿಗೆ ಪ್ರದಾನಿಸಿ ಗೌರವಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News