×
Ad

Kalaburagi | ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು : ಡಾ.ಅಲ್ಲಮಪ್ರಭು ದೇಶಮುಖ

ಶರಣಬಸವಪ್ಪ ಅಪ್ಪ ಪುಣ್ಯಸ್ಮರಣೆ ಅಂಗವಾಗಿ 15 ದಿನಗಳ ಉಚಿತ ಆರೋಗ್ಯಭಾಗ್ಯ ಕಾರ್ಯಕ್ರಮಕ್ಕೆ ಚಾಲನೆ

Update: 2026-07-02 17:17 IST

ಕಲಬುರಗಿ : ಉತ್ತಮ ಆರೋಗ್ಯವಿದ್ದಾಗ ಮಾತ್ರ ವ್ಯಕ್ತಿ, ಕುಟುಂಬ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ. ಆರೋಗ್ಯವೇ ಮನುಷ್ಯನ ನಿಜವಾದ ಸಂಪತ್ತು ಎಂದು ಶರಣಬಸವೇಶ್ವರ ಸಂಸ್ಥಾನದ ಆಡಳಿತಾಧಿಕಾರಿ ಡಾ. ಅಲ್ಲಮಪ್ರಭು ದೇಶಮುಖ ಹೇಳಿದರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಗುರುವಾರ ಲಿಂ. ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳು, ಬಸವೇಶ್ವರ ಬೋಧನ ಮತ್ತು ಸಾರ್ವಜನಿಕ ಆಸ್ಪತ್ರೆ ಹಾಗೂ ಎಸ್. ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 15 ದಿನಗಳ ಉಚಿತ ಆರೋಗ್ಯಭಾಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ವೇಗದ ಜೀವನಶೈಲಿಯಲ್ಲಿ ಅನೇಕರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಸಣ್ಣ ಆರೋಗ್ಯ ಸಮಸ್ಯೆಗಳನ್ನೇ ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆದರೆ ಗಂಭೀರ ಕಾಯಿಲೆಗಳನ್ನು ತಡೆಗಟ್ಟಬಹುದು. ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

“ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಆರೋಗ್ಯವಂತ ಸಮಾಜವೇ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆಧಾರ. ಪ್ರತಿಯೊಬ್ಬರೂ ತಾವು ಮಾತ್ರವಲ್ಲದೆ ತಮ್ಮ ಕುಟುಂಬದವರನ್ನೂ ನಿಯಮಿತ ಆರೋಗ್ಯ ತಪಾಸಣೆಗೆ ಪ್ರೇರೇಪಿಸಬೇಕು” ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ವೈದ್ಯ ಡಾ. ಶರಣಗೌಡ ಪಾಟೀಲ ಮಾತನಾಡಿ, ಆರೋಗ್ಯ ತಪಾಸಣೆಯ ಮೂಲಕ ತಮ್ಮ ಆರೋಗ್ಯದ ಸ್ಥಿತಿಯನ್ನು ತಿಳಿದುಕೊಂಡು ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಯೋಗಾಭ್ಯಾಸ, ಸ್ವಚ್ಛತೆ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಸಮಾನ ಕಾಳಜಿ ವಹಿಸುವುದು ಅತ್ಯಗತ್ಯ ಎಂದು ತಿಳಿಸಿದರು.

ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳ ನಿರ್ದೇಶಕಿ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿದರು.

ವೇದಿಕೆ ಮೇಲೆ ಹಿರಿಯ ವೈದ್ಯರಾದ ಡಾ.ಮಲ್ಲಿಕಾರ್ಜುನ ತೆಗನೂರ, ಡಾ.ಸುನೀಲ ದೇಶಮುಖ, ಡಾ.ವೀರೆಂದ್ರ ಪಾಟೀಲ, ಡಾ.ನೀಲಾಂಬಿಕಾ ಶೇರಿಕಾರ, ಪ್ರಾಚಾರ್ಯೆ ಡಾ.ಸೀಮಾ ಪಾಟೀಲ, ಡಾ.ಎಂ.ಆರ್.ಹುಗ್ಗಿ, ಡಾ.ಅಮ್ರಪಾಲಿ ವೇದಿಕೆ ಮೇಲಿದ್ದರು.

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಆರ್.ಎo.ಸಿ ಮಹಾವಿದ್ಯಾಲಯದ ವೈದ್ಯರು ಮತ್ತು ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳ ಎಲ್ಲ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಡಾ. ರಾಜಲಕ್ಷ್ಮೀ ಡಿ. ಸ್ವಾಗತಿಸಿದರು, ಡಾ.ಸಂತೋಷಕುಮಾರ ನಗಲಾಪೂರ ಪ್ರಾಸ್ತಾವಿಕ ಮಾತನಾಡಿದರು, ಪ್ರಸಾದ ಅಷ್ಟಗೀಕರ್ ನಿರೂಪಿಸಿದರೆ, ಡಾ.ಶ್ವೇತಾ ಗೋಪನೆ ವಂದಿಸಿದರು. ನಂತರ ಗೋದುತಾಯಿ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News