ಕಲಬುರಗಿ | ರಾಜ್ಯದಲ್ಲಿ ಬಾಣಂತಿಯರ ಸಾವು ತಡೆಯುವಲ್ಲಿ ಸರಕಾರ ವಿಫಲ : ಡಾ.ಸುಧಾ ಹಾಲಕಾಯಿ
ಕಲಬುರಗಿ : ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಮಕ್ಕಳ ಮತ್ತು ಮಹಿಳಾ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸದಸ್ಯೆ ಡಾ.ಸುಧಾ ಹಾಲಕಾಯಿ ಆಗ್ರಹಿಸಿದ್ದಾರೆ.
ನಗರದ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ, ಇನ್ನೂ ಬಾಣಂತಿಯರ ಸಾವಿಗೆ ನೈಜ ಕಾರಣಗಳನ್ನು ತಿಳಿದು ಅದನ್ನು ನಿಯಂತ್ರಿಸಲು ಉಚ್ಚ ನ್ಯಾಯಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಸರಕಾರಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ ಮೃತ ಬಾಣಂತಿಯರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು. ಮಕ್ಕಳನ್ನು ಈ ಸರ್ಕಾರ ದತ್ತು ಸ್ವೀಕಾರ ಮಾಡಿ, ಅವರಿಗೆ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಭದ್ರತೆ ಒದಗಿಸಬೇಕು. ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆರನೆಯ ಗ್ಯಾರಂಟಿಯಾಗಿ ಮಹಿಳೆಯರಿಗೆ ಬಾಣಂತಿಯರ ಸಾವಿನ ಗ್ಯಾರಂಟಿ ಕೊಟ್ಟಿದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಜ್ಯೋತಿ ಪಾಟೀಲ್, ಭಾಗೀರಥಿ ಗನ್ನಾಪುರ, ಚಂದಮ್ಮ ಪಾಟೀಲ್, ಜಯಶ್ರೀ ಹನ್ನೂರ್ ಸೇರಿದಂತೆ ಇತರರು ಹಾಜರಿದ್ದರು.