ಕಲಬುರಗಿ | ಗುಲ್ಬರ್ಗಾ ವಿವಿ ಸಿಂಡಿಕೇಟ್ ಸದಸ್ಯನ ಬಗ್ಗೆ ವರದಿ ಕೇಳಿದ ಸರಕಾರ
Update: 2025-07-17 15:24 IST
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ ಅವರ ಸಿಂಡಿಕೇಟ್ ಸದಸ್ಯತ್ವ ಹಿಂಪಡೆಯುವಂತೆ ದೂರು ಬಂದ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯು ಜು.7ರಂದು ವಿವಿ ಕುಲಸಚಿವರಿಗೆ ಪತ್ರ ಬರೆದಿದೆ.
ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರಿಗೆ ಹಿಂಸೆ ನೀಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ದೂರು ನೀಡಿದ್ದು, ಸದಸ್ಯತ್ವ ಹಿಂಪಡೆಯಬೇಕು ಎಂದು ಮನವಿ ಮಾಡಿದೆ.
ದೂರಿನ ಅಂಶಗಳನ್ನು ನಿಯಮಾನುಸಾರ ಪರಿಶೀಲನೆ ನಡೆಸಿ 7 ದಿನಗಳ ಒಳಗಾಗಿ ಸರಕಾರಕ್ಕೆ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಶಶಿಕಲಾ ಪತ್ರದ ಮುಖೇನ ತಿಳಿಸಿದ್ದಾರೆ.
ಸಿದ್ದಪ್ಪ ಮೂಲಗೆ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ರಕ್ಷಣಾ ವೇದಿಕೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮನವಿ ಮೂಲಕ ದೂರು ನೀಡಿವೆ.