ಕಲಬುರಗಿ | ಜು.5ರಂದು ʼಹಸಿರು ಪಥಕ್ಕೆʼ ಚಾಲನೆ: ಡಿಸಿ ಬಿ.ಫೌಝಿಯಾ ತರನ್ನುಮ್
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸರೀಕರಣ ಹೆಚ್ಚಿಸುವ ಮಹತ್ವಕಾಂಕ್ಷೆಯೊಂದಿಗೆ ಇದೇ ಜುಲೈ 5ಕ್ಕೆ ಆಯವ್ಯಯ ಘೋಷಣೆಯ ಸಸಿ ನೆಡೆಯುವ ಅಭಿಯಾನದ "ಹಸಿರು ಪಥ" ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚಿಸಿದ್ದಾರೆ.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಇದೇ ದಿನದಂದು ರಾಜ್ಯ ಮಟ್ಟದ ವನಮಹೋತ್ಸವ ಕಾರ್ಯಕ್ರಮಕ್ಕೆ ಮತ್ತು ಕಲಬುರಗಿ ನಗರದಾದ್ಯಂತ ಕೆರೆ, ಉದ್ಯಾನವನ, ಪ್ರಮುಖ ವೃತ್ತ, ರಸ್ತೆ ಬದಿಯಲ್ಲಿ ಸಸಿ ನೆಡೆಯುವ "ಹಸಿರು ಕಲಬುರಗಿ" ಅಭಿಯಾನಕ್ಕೂ ಚಾಲನೆ ನೀಡಲಾಗುತ್ತದೆ ಎಂದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಪ್ರದೇಶದ ಸಚಿವರು, ಶಾಸಕರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ, ಎಲ್ಲಿಯೂ ಶಿಷ್ಟಾಚಾರದಲ್ಲಿ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು. ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ಅದರಂತೆ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ ತಮಗೆ ನೀಡಿದ ಜವಾಬ್ದಾರಿಯಂತೆ ಕಾರ್ಯನಿರ್ವಹಿಸಬೇಕು ಎಂದರು.
ಕಲಬುರಗಿ ನಗರದ ಪಿ.ಡಿ.ಎ. ಕಾಲೇಜಿನ ಅವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಲ್ಲಿಯೆ ಬೃಹತ್ ಸಸಿ ನೆಡುವ ಅಭಿಯಾನ ಸಹ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ 6-7 ಸಾವಿರ ಜನರು ಸೇರುವ ನಿರೀಕ್ಷೆ ಇರುವುದರಿಂದ ಜನಸಂದಣಿ ನಿಯಂತ್ರಣಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಇತ್ತೀಚೆಗೆ ಎಸ್.ಓ.ಪಿ ಹೊರಡಿಸಿದ್ದು, ಅದರಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ, ಸ್ವಚ್ಛತೆ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಡಿ.ಸಿ.ಎಫ್ ಸುಮಿತ್ ಪಾಟೀಲ ಮಾತನಾಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ನಗರ ಪೊಲೀಸ್ ಉಪ ಆಯುಕ್ತ ಪ್ರವೀಣ ಎಚ್. ನಾಯಕ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ ಸೇರಿದಂತೆ ಪೊಲೀಸ್, ಅರಣ್ಯ, ಮಹಾನಗರ ಪಾಲಿಕೆಯ ಅಧಿಕಾರಿಗಳು ಇದ್ದರು.
ಜು.5 ರಂದು ನಗರದಲ್ಲಿ ಅರಣ್ಯ ಇಲಾಖೆಯ ಕಾರ್ಯಕ್ರಮ ನಡೆಯುವ ಪಿ.ಡಿ.ಎ. ಕಾಲೇಜು ಹಿಂಭಾಗದ ಮೈದಾನ ಸ್ಥಳವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಅವರೊಂದಿಗೆ ಡಿ.ಸಿ. ಬಿ.ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ ಪರಿಶೀಲಿದರು.