Kalaburagi | ಅತಿವೃಷ್ಟಿ ಪರಿಹಾರದಲ್ಲಿ ರೈತರಿಗೆ ಅನ್ಯಾಯ: 500 ಕೋಟಿ ರೂ. ಬಾಕಿ ಬಿಡುಗಡೆಗೆ ಬಿಜೆಪಿ ಒತ್ತಾಯ
ಕಲಬುರಗಿ : ಕಳೆದ ವರ್ಷದ ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ಕಲಬುರಗಿ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರ ಸಮರ್ಪಕ ಪರಿಹಾರ ನೀಡದೆ ವಂಚಿಸಿದೆ ಎಂದು ಆರೋಪಿಸಿರುವ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಬಾಕಿ ಇರುವ 500 ಕೋಟಿ ರೂ. ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 6 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದರೂ ಸರ್ಕಾರ ಕೇವಲ 3.24 ಲಕ್ಷ ಹೆಕ್ಟೇರ್ ಪ್ರದೇಶದ ಹಾನಿಯನ್ನು ಮಾತ್ರ ಪರಿಗಣಿಸಿದೆ ಎಂದು ಆರೋಪಿಸಿದರು.
ಪ್ರತಿ ಹೆಕ್ಟೇರ್ಗೆ 17 ಸಾವಿರ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದ್ದರೂ, ರೈತರ ಖಾತೆಗೆ ಎಕರೆಗೆ ಕೇವಲ 2 ಸಾವಿರ ರೂ. ಮಾತ್ರ ಜಮೆಯಾಗಿದ್ದು, ಉಳಿದ ಹಣ ಇನ್ನೂ ಬಿಡುಗಡೆಯಾಗಿಲ್ಲ ಎಂದು ದೂರಿದರು.
ಮಂಗಳವಾರ ಕಲಬುರಗಿಯಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಿ, ಬಾಕಿ ಪರಿಹಾರ ಬಿಡುಗಡೆಗೆ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಡಿಪಿ ಸಭೆ ನಡೆದಿಲ್ಲ ಎಂದು ಟೀಕಿಸಿದ ಅವರು, ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದರಿಂದಲೇ ಮುಖ್ಯಮಂತ್ರಿ ಸ್ವತಃ ಸಭೆ ನಡೆಸಲು ಬರುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್ ಠಾಣೆಗಳಿಂದಲೇ ಆರೋಪಿಗಳು ಪರಾರಿಯಾಗುವ ಘಟನೆಗಳು ನಡೆಯುತ್ತಿವೆ. ಗೃಹ ಸಚಿವರ ಸ್ವಕ್ಷೇತ್ರ ಚಿತ್ತಾಪುರದಲ್ಲಿಯೇ ಅಕ್ರಮ ಮರಳುಗಾರಿಕೆ, ಮಟ್ಕಾ, ಗಾಂಜಾ ದಂಧೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದರೂ ಸರ್ಕಾರ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸ್ವಾಗತ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಜಿಲ್ಲೆಯ ರೈತರು 34.99 ಕೋಟಿ ರೂ. ಬೆಳೆ ವಿಮೆ ಪ್ರೀಮಿಯಂ ಪಾವತಿಸಿದ್ದರೂ ಸಮರ್ಪಕ ವಿಮೆ ಪರಿಹಾರ ದೊರೆತಿಲ್ಲ. ಆದರೆ ಬೀದರ್ ಜಿಲ್ಲೆಯ ರೈತರಿಗೆ ಪೂರ್ಣ ಪ್ರಮಾಣದ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದರು.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೇವಾಲಯ ಹಾಗೂ ಮಸೀದಿಗಳಲ್ಲೇ ಅರ್ಜಿಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ತಳವಾರ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ. ಈ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಗಿರೀಶ್ ಭಜಂತ್ರಿ, ಸದ್ದಾಮ್ ವಜೀರಗಾಂವ್, ಚಂದ್ರಕಾಂತ ಕಿರಸಾವಳಗಿ, ಬೋಗೇಶ್ ಕಿರಸಾವಳಗಿ, ಸಂತೋಷ್ ತಳವಾರ, ಅಯ್ಯಣ್ಣ ಕೋಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.