Kalaburagi | ಮಾಹಿತಿ ಆಯೋಗದ ಆಶಯಕ್ಕೆ ತಕ್ಕಂತೆ ಕಾರ್ಯನಿರ್ವಹಿಸೋಣ: ಬಿ. ವೆಂಕಟಸಿಂಗ್
ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಕಚೇರಿಯಲ್ಲಿ ಧ್ವಜಾರೋಹಣ
ಕಲಬುರಗಿ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಕಚೇರಿಯಲ್ಲಿ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಅವರು ಶನಿವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಪೊಲೀಸ್ ಪಡೆಯಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಪಂಡಿತ್ ಜವಾಹರಲಾಲ್ ನೆಹರೂ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕ ಮಹನೀಯರ ನೇತೃತ್ವದಲ್ಲಿ ನಡೆದ ಹೋರಾಟ ಹಾಗೂ ತ್ಯಾಗ–ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಅವರ ಕೊಡುಗೆಯನ್ನು ಸದಾ ಗೌರವದಿಂದ ಸ್ಮರಿಸಬೇಕು ಎಂದರು.
ಸ್ವಾತಂತ್ರ್ಯಾನಂತರ ಭಾರತವು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದ್ದು, ದೇಶದ ಅಭಿವೃದ್ಧಿ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ಮಾಹಿತಿ ಆಯೋಗವು ಸಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಆಶಯ ಹಾಗೂ ಉದ್ದೇಶಗಳಿಗೆ ಅನುಗುಣವಾಗಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಪೀಠದ ಕಚೇರಿ ಶಾಖಾಧಿಕಾರಿ ಶಿವಕುಮಾರ್ ಸೇರಿದಂತೆ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು.