ಕಲಬುರಗಿ: ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 19ರಂದು ಬೆಳಿಗ್ಗೆ 10 ಗಂಟೆಗೆ “ಜನರ ಸಾಮಾಜಿಕ ಮತ್ತು ಆರ್ಥಿಕ ಬದುಕಿನ ಮೇಲೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಣಾಮ” ಕುರಿತು ಒಂದು ದಿನದ ರಾಷ್ಟ್ರೀಯ ಸಮಾವೇಶವು ಕಲಬುರಗಿಯ ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಬುದ್ಧ ಸೆಮಿನಾರ್ ಹಾಲ್‌ನಲ್ಲಿ ಜರುಗಲಿದೆ.

ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮ ನಿಯಮಿತದ ಅಧ್ಯಕ್ಷರಾದ ಕನೀಜ್ ಫಾತಿಮಾ ಅವರು ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಕಲಬುರಗಿ ಕೆಪಿಇ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸೂರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ವಿಶ್ವವಿದ್ಯಾಲಯ, ಹಂಪಿಯ ಅಭಿವೃದ್ಧಿ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಟಿ.ಆರ್. ಚಂದ್ರಶೇಖರ್ ಅವರು ಸಮಾವೇಶದ ಮುಖ್ಯ ಆಶಯ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಉಡಿಕೇರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹಾಗೂ ಕೆಪಿಇ ಸೊಸೈಟಿಯ ಆಡಳಿತಾಧಿಕಾರಿ ಡಾ. ಚಂದ್ರಶೇಖರ್ ಶೀಲವಂತರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಹಾಯಕ ಪ್ರಾಧ್ಯಾಪಕರಾದ ಡಾ. ಗಾಂಧೀಜಿ ಮೊಳಕೇರಿ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ.

ಸಮಾವೇಶದ ಮೊದಲ ತಾಂತ್ರಿಕ ಅಧಿವೇಶನವು ಮಧ್ಯಾಹ್ನ 12ರಿಂದ 1.30 ಗಂಟೆಯವರೆಗೆ ನಡೆಯಲಿದ್ದು, “ಐದು ಗ್ಯಾರಂಟಿಗಳ ಸಾಮಾಜಿಕ-ಆರ್ಥಿಕ ಪರಿಣಾಮಗಳ ವಿಶ್ಲೇಷಣೆ” ವಿಷಯದ ಕುರಿತು ಸೋಲಾಪುರ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿರ್ದೇಶಕರಾದ ಪ್ರೊ. ಜಿ.ಎಸ್. ಕಾಂಬ್ಳೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಲಿದ್ದಾರೆ.

ಇದೇ ವೇಳೆಯಲ್ಲಿ ಪರ್ಯಾಯ ತಾಂತ್ರಿಕ ಅಧಿವೇಶನ–‘ಎ’ ನಡೆಯಲಿದ್ದು, “ಕರ್ನಾಟಕದ ಐದು ಗ್ಯಾರಂಟಿಗಳು: ಸಮಗ್ರ ಅಭಿವೃದ್ಧಿಯ ಒಳಗೊಳ್ಳುವಿಕೆಯ ಮಾದರಿ” ವಿಷಯದ ಕುರಿತು ವಿಜಯಪುರದ ಕರ್ನಾಟಕ ರಾಜ್ಯ ಎ.ಡಬ್ಲ್ಯೂ.ಯು. ಜನಶಕ್ತಿ ಕ್ಯಾಂಪಸ್‌ನ ಸಮಾಜ ವಿಜ್ಞಾನ ನಿಕಾಯದ ಡೀನ್ ಹಾಗೂ ಅರ್ಥಶಾಸ್ತ್ರ ವಿಭಾಗದ ಪ್ರೊ. ಡಾ. ಆರ್.ವಿ. ಗಂಗಶೆಟ್ಟಿ ಉಪನ್ಯಾಸ ನೀಡಲಿದ್ದಾರೆ.

ಎರಡನೇ ತಾಂತ್ರಿಕ ಅಧಿವೇಶನವು ಮಧ್ಯಾಹ್ನ 2ರಿಂದ 3.30 ಗಂಟೆಯವರೆಗೆ ನಡೆಯಲಿದ್ದು, “ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆ” ಕುರಿತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ಮತ್ತು ಯೋಜನಾ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಬಸವರಾಜ ಎಂ. ಸೋಮನಮರಡಿ ಮಾತನಾಡಲಿದ್ದಾರೆ.

ಪರ್ಯಾಯ ತಾಂತ್ರಿಕ ಅಧಿವೇಶನ–2(ಎ) ಯಲ್ಲಿ “ಬಡತನ ನಿರ್ಮೂಲನೆ ಮತ್ತು ಸಾಮಾಜಿಕ ನ್ಯಾಯದಲ್ಲಿ ಐದು ಗ್ಯಾರಂಟಿಗಳ ಕೊಡುಗೆ” ವಿಷಯದ ಕುರಿತು ಬೀದರ್ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ವಿಭಾಗದ ಡೀನ್ ಡಾ. ಜೈಕುಮಾರ್ ಸಿಂದೆ ಪ್ರಬಂಧ ಮಂಡಿಸಲಿದ್ದಾರೆ.

ರಾಷ್ಟ್ರೀಯ ಸಮಾವೇಶದ ಸಮಾರೋಪ ಸಮಾರಂಭವು ಮಧ್ಯಾಹ್ನ 3.30ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ರಮೇಶ ಲಂಡನಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆಪಿಇ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸೂರನ್ ಅಧ್ಯಕ್ಷತೆ ವಹಿಸಲಿದ್ದು, ಅರ್ಥಶಾಸ್ತ್ರದ ಹಿರಿಯ ಪ್ರಾಧ್ಯಾಪಕ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ದಶರಥ ನಾಯಕ್, ಜಿಯುಪಿಸಿಟಿಎ ಅಧ್ಯಕ್ಷ ಡಾ. ನೀಲಕಂಠ ಕಣ್ಣಿ ಹಾಗೂ ಆಡಳಿತಾಧಿಕಾರಿ ಡಾ. ಚಂದ್ರಶೇಖರ್ ಶೀಲವಂತರ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor