Kalaburagi | ಬರ ಘೋಷಣೆ, ಸಾಲಮನ್ನಾಕ್ಕೆ ಆಗ್ರಹಿಸಿ ನವಕರ್ನಾಟಕ ರೈತ ಸಂಘದಿಂದ ಪಾದಯಾತ್ರೆ

Update: 2026-07-18 23:25 IST

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ನವಕರ್ನಾಟಕ ರೈತ ಸಂಘದ ವತಿಯಿಂದ ಶನಿವಾರ ನಗರದಲ್ಲಿ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಆವರಣದಿಂದ ಆರಂಭವಾದ ಪಾದಯಾತ್ರೆ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು. ರೈತರು, ಗ್ರಾಮಸ್ಥರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮಹಿಳಾ ಸಂಘಟನೆಗಳ ಸದಸ್ಯರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ್, ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸಮರ್ಪಕ ಮುಂಗಾರು ಮಳೆಯಾಗದ ಕಾರಣ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವೆಡೆ ಅಲ್ಪ ಪ್ರಮಾಣದ ಮಳೆಯಾದರೂ ಬಿತ್ತನೆ ಮಾಡಿದ ಬೆಳೆಗಳು ಹಾಗೂ ನಾಟಿ ಮಾಡಿದ ಸಸಿಗಳು ಒಣಗುತ್ತಿದ್ದು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆಯೂ ಉಂಟಾಗಿದೆ ಎಂದು ಹೇಳಿದರು.

ಕಳೆದ ಮೂರು-ನಾಲ್ಕು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ನಿರಂತರ ನಷ್ಟ ಅನುಭವಿಸುತ್ತಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸಮರ್ಪಕ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ಇದುವರೆಗೆ ಬರ ಘೋಷಣೆ ಮಾಡಿಲ್ಲ. ಆದ್ದರಿಂದ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬರ ಪರಿಹಾರ ನೀಡಬೇಕು. ಜೊತೆಗೆ ರೈತರ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಆದಿನಾಥ ಹೀರಾ, ಜಗದೇವಪ್ಪ ಪಾಟೀಲ್, ಭವಂತರಾವ್ ಪಾಟೀಲ್, ಮಹೇಶ ಕಡೆಚೂರ, ಡಾ. ಶಿವಲಿಂಗಪ್ಪ ಗೌಳಿ, ನಾಗಿಂದ್ರಪ್ಪ ಆರ್. ದಂಡೋತಿಕರ್, ಶಿವಾನಂದ ಮಠಪತಿ, ಉಮಾಪತಿ ಪಾಟೀಲ್, ಶಾಂತಲಿಂಗಪ್ಪ ಪಡಶೆಟ್ಟಿ, ಶರಣಗೌಡ ಬೆಳಗುಂಪಿ, ಮುಕುಂದ ರೆಡ್ಡಿ, ನಾಗಮ್ಮ ಬಬಲಾದ, ಸರಸ್ವತಿ ಮಠಪತಿ ಕಪನೂರ, ಭೀಮಶೆಟ್ಟಿ ಮುಕ್ಕಾ, ಮಂಜುನಾಥ ಧೂತ್ತರಗಾಂವ, ಶಿವಲಿಂಗ ಪಾಟೀಲ್ ತಿಂಗಳಿ, ನಾಗವೇಣಿ ಮಠಪತಿ, ಶಿವರಾಜ ಗುತ್ತೇದಾರ, ಗುಂಡಪ್ಪ ಪಟ್ಟಣ, ರಾಜಶೇಖರ ಕಲಬುರಗಿ, ಶಿವಶರಣಪ್ಪ ಫರಹತಾಬಾದ, ಸುಧಾಕರ ಇಟಗಿ, ಉಮೇಶ ಬಸವ ಪಟ್ಟಣ, ಸುನಿಲ್ ಇನಾಮದಾರ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News