Kalaburagi | ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ, ಶುಚಿತ್ವದಲ್ಲಿ ರಾಜಿ ಬೇಡ : ಡಿಸಿ ಇಕ್ರಮ್ ಶರೀಫ್

Update: 2026-08-19 23:33 IST

ಕಲಬುರಗಿ: ಜಿಲ್ಲೆಯ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಆಹಾರಧಾನ್ಯ ಗುಣಮಟ್ಟದಿಂದ ಕೂಡಿರಬೇಕು. ಪ್ರತಿದಿನ ಸ್ವಚ್ಛ ಹಾಗೂ ತಾಜಾ ತರಕಾರಿಗಳನ್ನು ಬಳಸಬೇಕು. ಆಹಾರದ ಗುಣಮಟ್ಟ, ಶುಚಿತ್ವ ಮತ್ತು ನೈರ್ಮಲ್ಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ವಾರ್ಡನ್‌ಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಗುತ್ತಿಗೆದಾರರಿಂದ ಆಹಾರಧಾನ್ಯ ಸ್ವೀಕರಿಸುವಾಗ ಅದರ ಗುಣಮಟ್ಟ ಹಾಗೂ ಮುಕ್ತಾಯ ದಿನಾಂಕವನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಬಾರದು. ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾದರೆ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ಇತ್ತೀಚೆಗೆ ವಸತಿ ಶಾಲೆಗಳಲ್ಲಿ ಊಟ ಸೇವನೆಯಿಂದ ಮಕ್ಕಳು ಅಸ್ವಸ್ಥರಾಗುತ್ತಿರುವ ಪ್ರಕರಣಗಳು ವರದಿಯಾಗಿರುವುದು ಬೇಸರದ ಸಂಗತಿ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲರೂ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದರು.

ಶಿಕ್ಷಕರು ಹಾಗೂ ಪ್ರಾಂಶುಪಾಲರು ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ಮಕ್ಕಳೊಂದಿಗೆ ಸೇವಿಸಬೇಕು. ವಾರ್ಡನ್‌ಗಳು ದಿನದ ಮೂರು ಹೊತ್ತಿನ ಊಟದ ಸಮಯದಲ್ಲಿ ಸ್ಥಳದಲ್ಲೇ ಇದ್ದು ಆಹಾರದ ಗುಣಮಟ್ಟದ ಮೇಲೆ ನಿಗಾ ವಹಿಸಬೇಕು ಎಂದು ಡಿಸಿ ಸೂಚಿಸಿದರು.

ಅಕ್ಕಿ, ಗೋಧಿ ಸೇರಿದಂತೆ ಆಹಾರಧಾನ್ಯ ಹಾಗೂ ಅಡುಗೆ ಸಾಮಗ್ರಿಗಳನ್ನು ಸ್ವೀಕರಿಸಿದ ಕೂಡಲೇ ಸ್ವಚ್ಛಗೊಳಿಸಿ ಸೂಕ್ತ ರೀತಿಯಲ್ಲಿ ಸಂಗ್ರಹಿಸಬೇಕು. ಕನಿಷ್ಠ 15 ದಿನಕ್ಕೊಮ್ಮೆ ಆರ್‌ಒ ಘಟಕವನ್ನು ಸ್ವಚ್ಛಗೊಳಿಸಬೇಕು. ಅಡುಗೆ ಕೋಣೆ, ಊಟದ ಹಾಲ್, ಶೌಚಾಲಯ ಸೇರಿದಂತೆ ಶಾಲಾ ಆವರಣ ಸ್ವಚ್ಛ ಹಾಗೂ ನೈರ್ಮಲ್ಯದಿಂದ ಕೂಡಿರಬೇಕು. ಮಕ್ಕಳಿಗೆ ಸದಾ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.

ಆರೋಗ್ಯ ಇಲಾಖೆಯ ಆರ್‌ಬಿಎಸ್‌ಕೆ ತಂಡಗಳು ವಸತಿ ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು. ತುರ್ತು ಸಂದರ್ಭಗಳಲ್ಲಿ ಅಗತ್ಯ ಔಷಧೋಪಚಾರ ಲಭ್ಯವಿರುವಂತೆ ನೋಡಿಕೊಳ್ಳಬೇಕು. ನರ್ಸಿಂಗ್ ಸಿಬ್ಬಂದಿ ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ವಸತಿ ಶಾಲೆಗಳಲ್ಲಿ ಅಗತ್ಯವಿರುವ ಬೆಂಚ್‌ಗಳು, ವಿದ್ಯುತ್ ಹಾಗೂ ಕಟ್ಟಡ ದುರಸ್ತಿ, ಆರ್‌ಒ ಘಟಕ ಸೇರಿದಂತೆ ಮೂಲಸೌಕರ್ಯಗಳ ಸಂಪೂರ್ಣ ಪಟ್ಟಿಯನ್ನು ಕೂಡಲೇ ಸಲ್ಲಿಸಬೇಕು. ಕೆಕೆಆರ್‌ಡಿಬಿ ಅಥವಾ ಸಂಬಂಧಪಟ್ಟ ಇಲಾಖೆಯ ಅನುದಾನದಡಿ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಆಶಯದಿಂದ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ಪ್ರತಿಯೊಂದು ವಸತಿ ಶಾಲೆಯೂ ಶೇ.100ರಷ್ಟು ಫಲಿತಾಂಶ ಪಡೆಯುವ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಹಾಗೂ ಪ್ರಭಾರಿ ಬಿಸಿಎಂ ಅಧಿಕಾರಿ ಸಂಗಮೇಶ ಸೇರಿದಂತೆ ಮೂರು ಇಲಾಖೆಗಳ ವ್ಯಾಪ್ತಿಯ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ವಾರ್ಡನ್‌ಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News