Kalaburagi | ಎನ್ನೆಸ್ಸೆಸ್‌, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ

Update: 2026-08-05 17:23 IST

ಕಲಬುರಗಿ, ಆ.5: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್‌) ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಶಾಲೂ ಐಪಿಎಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಕಾಣೆಯಾಗುತ್ತಿರುವ ಘಟನೆಗಳು ಕಳವಳಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ, ಶಿಸ್ತು, ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರಾದ ದೇವನಗೌಡ ಎ. ಪಾಟೀಲ ಮಾತನಾಡಿ, ಕಠಿಣ ಪರಿಶ್ರಮ, ಆತ್ಮವಿಶ್ವಾಸ ಹಾಗೂ ನಿರಂತರ ಅಧ್ಯಯನದಿಂದ ವಿದ್ಯಾರ್ಥಿನಿಯರು ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ಕರೆ ನೀಡಿದರು.

ನಿವೃತ್ತ ಪ್ರಾಧ್ಯಾಪಕರಾದ ಟಿ. ಗುರುಬಸಪ್ಪ ಮಾತನಾಡಿ, ಕಡಿಮೆ ಅಂಕಗಳು ಬಂದರೂ ಎದೆಗುಂದದೆ ನಿರಂತರ ಪರಿಶ್ರಮದಿಂದ ಯಶಸ್ಸು ಸಾಧಿಸಬಹುದು ಎಂದು ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು. ತಾವು ಬಳಿಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಹತ್ತಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಮಾರ್ಗದರ್ಶನ ನೀಡಿದ್ದು, ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಹಾಗೂ ಶೇ.100 ಫಲಿತಾಂಶ ದಾಖಲಿಸಿದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಕಾಲೇಜಿನ ಅಭಿವೃದ್ಧಿಗೆ ದೇಣಿಗೆ ನೀಡಿದ ರೈಟ್ ಟು ಲೀವ್ ಸಂಸ್ಥೆಯ ಶ್ರೀ ಮಲ್ಲಿಕಾರ್ಜುನ ಎಸ್‌ಐ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಝಡ್. ಎನ್. ಜಾಗೀರದಾರ ವಹಿಸಿದ್ದರು. ವೇದಿಕೆಯಲ್ಲಿ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಉಪ ಪ್ರಾಚಾರ್ಯ ವಿಜಯಕುಮಾರ್ ಬೆಳಮಗಿ, ಹಿರಿಯ ಉಪನ್ಯಾಸಕರು ಹಾಗೂ ಕರ್ನಾಟಕ ರಾಜ್ಯ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಶರಣಗೌಡ ಪಾಟೀಲ್, ಎನ್‌ಎಸ್‌ಎಸ್‌ ಸಂಯೋಜಕರಾದ ಶಾಂತ ಮಾಲಿಪಾಟೀಲ್, ಸುಧಾ ಜಗನ್ನಾಥ್, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಕು. ಸಿಂಚನಾ ಪ್ರಾರ್ಥನಾ ಗೀತೆ ಹಾಡಿದರು. ಉಪನ್ಯಾಸಕರಾದ ರವೀಂದ್ರ ಸಜ್ಜಿ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನು ನೀಡಿದರು. ನಾಗರತ್ನ ಇಂಡೆ ಕಾರ್ಯಕ್ರಮ ನಿರೂಪಿಸಿದರೆ, ಶರೀಫ ಎಂ.ಎಫ್. ವಂದನಾರ್ಪಣೆ ಸಲ್ಲಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News