ಕಲಬುರಗಿ: ರಾಜ್ಯ ಸರ್ಕಾರದ ‘ಪ್ರಜಾ ಸೇವೆ’ ಆಂದೋಲನ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಮೊದಲ ಸಭೆಯನ್ನು ಸೆಪ್ಟೆಂಬರ್ 5ರಂದು ಕಮಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಕಮಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ 19 ಗ್ರಾಮ ಪಂಚಾಯಿತಿಗಳವಾರು ಪ್ರತ್ಯೇಕ ಕೌಂಟರ್‌ಗಳನ್ನು ಸ್ಥಾಪಿಸಿ ದೂರುಗಳು ಹಾಗೂ ಅರ್ಜಿಗಳನ್ನು ಸ್ವೀಕರಿಸಬೇಕು. ಕೃಷಿ, ತೋಟಗಾರಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಪ್ರಮುಖ ಇಲಾಖೆಗಳು ತಮ್ಮ ಯೋಜನೆಗಳ ಕುರಿತು ಮಾಹಿತಿ ನೀಡಲು ಪ್ರತ್ಯೇಕ ಸ್ಟಾಲ್‌ಗಳನ್ನು ತೆರೆಯಬೇಕು ಎಂದು ಸೂಚಿಸಿದರು.

ಪ್ರತಿ ಸ್ಟಾಲ್‌ನಲ್ಲಿ ಕಂಪ್ಯೂಟರ್ ಆಪರೇಟರ್ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ಇಂಟರ್‌ನೆಟ್ ಮತ್ತು ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ ಹಾಗೂ ಶಾಮಿಯಾನ ಸೌಲಭ್ಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮತ್ತು ಪೊಲೀಸ್ ಭದ್ರತೆಯನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದ ಅವರು, ಕಾರ್ಯಕ್ರಮದ ಸಂಪೂರ್ಣ ಬ್ಲೂಪ್ರಿಂಟ್ ಅನ್ನು ಗುರುವಾರ ಸಂಜೆಯೊಳಗೆ ಸಿದ್ಧಪಡಿಸುವಂತೆ ಇವೆಂಟ್ ಮ್ಯಾನೇಜರ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಸಾರ್ವಜನಿಕರಿಗೆ ಅರ್ಜಿ ಬರೆಯಲು ಸಹಾಯ ಮಾಡುವ ಹಾಗೂ ಜನರನ್ನು ನಿಯಂತ್ರಿಸಲು ಅಗತ್ಯ ಸಂಖ್ಯೆಯ ಸ್ವಯಂಸೇವಕರನ್ನು ನಿಯೋಜಿಸಬೇಕು. ಜಾಗೃತಿ ಮೂಡಿಸುವ ಸ್ಟಾಲ್‌ಗಳನ್ನು ಸ್ಥಾಪಿಸಲು ಉದ್ದೇಶಿಸಿರುವ ಇಲಾಖೆಗಳು ಗುರುವಾರ ಸಂಜೆಯೊಳಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಕಮಲಾಪುರ ತಹಶೀಲ್ದಾರ್ ಮುಹಮ್ಮದ್ ಮೊಹಸೀನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor