×
Ad

Kalaburagi | ಪತ್ರಿಕೋದ್ಯಮದಲ್ಲಿ ನೈತಿಕ ಮೌಲ್ಯಗಳ ಸಂರಕ್ಷಣೆ ಇಂದಿನ ಅಗತ್ಯ: ಶಿವರಂಜನ್ ಸತ್ಯಂಪೇಟೆ

ಶರಣಬಸವ ವಿಶ್ವವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ

Update: 2026-07-01 17:16 IST

ಕಲಬುರಗಿ: ಪತ್ರಿಕೋದ್ಯಮ ವೃತ್ತಿಯ ನೈಜ ಮೌಲ್ಯಗಳನ್ನು ಉಳಿಸಿ ಬೆಳೆಸುವುದು ಹಾಗೂ ವೃತ್ತಿಯಲ್ಲಿ ಕಂಡುಬರುತ್ತಿರುವ ನೈತಿಕ ಅವನತಿಯನ್ನು ತಡೆಹಿಡಿಯುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಶಿವರಂಜನ್ ಸತ್ಯಂಪೇಟೆ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನಾ ವಿಭಾಗ ವತಿಯಿಂದ ಅನುಭವ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪತ್ರಕರ್ತರಲ್ಲಿ ವೃತ್ತಿಪರತೆ, ನೈತಿಕತೆ ಹಾಗೂ ಪ್ರಾಮಾಣಿಕತೆಯ ಮೌಲ್ಯಗಳು ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಒಂದು ಕಾಲದಲ್ಲಿ ಉದಾತ್ತ ವೃತ್ತಿಯೆಂದು ಪರಿಗಣಿಸಲ್ಪಟ್ಟಿದ್ದ ಪತ್ರಿಕೋದ್ಯಮ ಇಂದು ಕೆಲವರ ಅನೈತಿಕ ನಡೆ-ನುಡಿಗಳಿಂದ ತನ್ನ ಘನತೆಯನ್ನು ಕಳೆದುಕೊಳ್ಳುತ್ತಿದೆ. ವೃತ್ತಿಯ ಗೌರವವನ್ನು ಮರುಸ್ಥಾಪಿಸುವ ಜವಾಬ್ದಾರಿ ಪ್ರತಿಯೊಬ್ಬ ಪತ್ರಕರ್ತನ ಮೇಲಿದೆ. ಭ್ರಷ್ಟಾಚಾರದ ಆಮಿಷಗಳಿಗೆ ಒಳಗಾಗದೆ ಸತ್ಯ, ನಿಷ್ಪಕ್ಷಪಾತತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಕಾಪಾಡಿಕೊಳ್ಳುವುದು ಪತ್ರಕರ್ತರ ಕರ್ತವ್ಯ ಎಂದು ಹೇಳಿದರು.

ಡಿಜಿಟಲ್ ಮಾಧ್ಯಮಗಳ ಪ್ರಭಾವದಿಂದ ಪತ್ರಿಕೋದ್ಯಮದ ಸ್ವರೂಪ ಬದಲಾಗಿದ್ದು, ಯೂಟ್ಯೂಬ್, ಇನ್‌ಸ್ಟಾಗ್ರಾಂ, ಟೆಲಿಗ್ರಾಂ ಸೇರಿದಂತೆ ವಿವಿಧ ಆನ್‌ಲೈನ್ ವೇದಿಕೆಗಳ ಮೂಲಕ ಯಾರಾದರೂ ಸುದ್ದಿ ಪ್ರಸಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಮಾಹಿತಿಯ ಸತ್ಯಾಸತ್ಯತೆ ಮತ್ತು ವಿಶ್ವಾಸಾರ್ಹತೆಯ ದೃಷ್ಟಿಯಿಂದ ಮುದ್ರಣ ಮಾಧ್ಯಮ ಇನ್ನೂ ತನ್ನ ನಂಬಿಕೆಯನ್ನು ಉಳಿಸಿಕೊಂಡಿದೆ. ಪರಿಶೀಲಿಸದ ಮಾಹಿತಿಯ ಪ್ರಸಾರ ಹೆಚ್ಚುತ್ತಿರುವುದು ಕಳವಳಕಾರಿ ಎಂದು ಹೇಳಿದರು.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾದ ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಪತ್ರಿಕೋದ್ಯಮ ಕ್ಷೇತ್ರದ ಸೇವೆಯನ್ನು ಸ್ಮರಿಸಿದ ಅವರು, ‘ದಾಸೋಹ ಜ್ಞಾನರತ್ನ’ ಪಾಕ್ಷಿಕ ಪತ್ರಿಕೆಯ ಮೂಲಕ ಸಮಾಜಮುಖಿ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಅವರು ಸಲ್ಲಿಸಿದ ಕೊಡುಗೆಯನ್ನು ಶ್ಲಾಘಿಸಿದರು.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಪತ್ರಿಕೋದ್ಯಮ ಶಿಕ್ಷಣ ದೊರೆಯುವಂತೆ ಕಡಿಮೆ ಶುಲ್ಕ ನಿಗದಿಪಡಿಸಿದ್ದ ಅವರ ಸಾಮಾಜಿಕ ಬದ್ಧತೆ ಮಾದರಿಯಾಗಿದೆ. ಈ ಶೈಕ್ಷಣಿಕ ಪರಂಪರೆಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಯಶಸ್ವಿಯಾಗಿ ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಭಾಗದ ಡೀನ್ ಡಾ. ಟಿ.ವಿ. ಶಿವಾನಂದನ್, ಪ್ರಾಧ್ಯಾಪಕಿ ಸುನೀತಾ ಪಾಟೀಲ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಎಸ್.ಎಸ್. ಪಾಟೀಲ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸುಮಂಗಲಾ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News