Kalaburagi | ಜ್ಞಾನ, ಕೌಶಲ್ಯ, ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಿ: ಪ್ರೊ.ಬಟ್ಟು ಸತ್ಯನಾರಾಯಣ
ಕಲಬುರಗಿ : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ವಿದ್ಯಾರ್ಥಿ ಕಲ್ಯಾಣ ವಿಭಾಗ (ಡಿ.ಎಸ್.ಡಬ್ಲ್ಯೂ) ವತಿಯಿಂದ ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮ ಮಂಗಳವಾರ ವಿಶ್ವವಿದ್ಯಾಲಯದ ಆಡಿಟೋರಿಯಂ–2ರಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಅಥವಾ ಪ್ರಮಾಣಪತ್ರಗಳಿಗಿಂತ ಜ್ಞಾನ, ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಮಹತ್ವವಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಕ್ಯಾಂಪಸ್ ಜೀವನವನ್ನು ಶೈಕ್ಷಣಿಕ ಸಾಧನೆ, ವೃತ್ತಿಪರ ಬೆಳವಣಿಗೆ ಹಾಗೂ ವೈಯಕ್ತಿಕ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ಪರಸ್ಪರ ಸಂಸ್ಕೃತಿ, ಭಾಷೆ ಹಾಗೂ ಹಿನ್ನೆಲೆಗಳನ್ನು ಅರಿಯುವ ಅವಕಾಶ ಸಿಗುವುದರಿಂದ ಸಿಯುಕೆ “ಮಿನಿ ಇಂಡಿಯಾ”ಯಾಗಿ ರೂಪುಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದಲ್ಲಿರುವ ಉದ್ಯೋಗ ನಿಯೋಜನಾ ಘಟಕ, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ, ಭಾಷಾ ಕಲಿಕಾ ಪ್ರಯೋಗಾಲಯ, ಕೇಂದ್ರೀಯ ಗ್ರಂಥಾಲಯ, ಆಧುನಿಕ ಪ್ರಯೋಗಾಲಯಗಳು, ವಿದ್ಯಾರ್ಥಿವೇತನ ಹಾಗೂ ವಸತಿ ನಿಲಯ ಸೇರಿದಂತೆ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿದ್ಯಾರ್ಥಿ ಕಲ್ಯಾಣ ಹಾಗೂ ಕಾನೂನು ವಿಭಾಗದ ಡೀನ್ ಪ್ರೊ. ಬಸವರಾಜ್ ಎಂ. ಕುಬಕಡ್ಡಿ, ಸಿಯುಕೆ ಜ್ಞಾನ ಮತ್ತು ಸಂಶೋಧನೆಯ ಪ್ರಮುಖ ಕೇಂದ್ರವಾಗಿದ್ದು, ವಿಶ್ವವಿದ್ಯಾಲಯದ ಮೂಲಸೌಕರ್ಯ, ಗ್ರಂಥಾಲಯ, ಸಂಶೋಧನಾ ಬೆಂಬಲ, ಅಂತರ್ಜಾಲ ಹಾಗೂ ವಿದ್ಯಾರ್ಥಿ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ವಿಶ್ವವಿದ್ಯಾಲಯದ ನೀತಿ ಸಂಹಿತೆ, ಕಾಯ್ದೆ, ಸುಗ್ರೀವಾಜ್ಞೆಗಳು ಹಾಗೂ ಶಿಸ್ತಿನ ನಿಯಮಗಳನ್ನು ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ನಿಕಾಯದ ಡೀನ್ ಪ್ರೊ. ಪಾಂಡುರಂಗ ವಿ., ಕಂಪ್ಯೂಟರ್ ವಿಜ್ಞಾನ ನಿಕಾಯದ ಡೀನ್ ಪ್ರೊ. ಆರ್.ಎಸ್. ಹೆಗಡಿ, ಮಾನವಶಾಸ್ತ್ರ ಮತ್ತು ಭಾಷೆಗಳ ನಿಕಾಯದ ಡೀನ್ ಪ್ರೊ. ವಿಕ್ರಮ್ ವಿಸಾಜಿ ಹಾಗೂ ಸಾಮಾಜಿಕ ಮತ್ತು ವರ್ತನಾ ವಿಜ್ಞಾನಗಳ ನಿಕಾಯದ ಡೀನ್ ಪ್ರೊ. ಪವಿತ್ರಾ ಆರ್. ಆಲೂರ್ ತಮ್ಮ ವಿಭಾಗಗಳ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅವಕಾಶಗಳ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಪರೀಕ್ಷಾ ವ್ಯವಸ್ಥೆ, ವಿದ್ಯಾರ್ಥಿ ಶಿಸ್ತು, ಭಾಷಾ ಪ್ರಯೋಗಾಲಯ, ವಿದ್ಯಾರ್ಥಿವೇತನ, ಕ್ರೀಡೆ, ಸ್ವಯಂ ಪೋರ್ಟಲ್, ರಾಷ್ಟ್ರೀಯ ಶಿಕ್ಷಣ ನೀತಿ–2020, ಶೈಕ್ಷಣಿಕ ವಿಭಾಗ, ಗ್ರಂಥಾಲಯ, ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್), ಉದ್ಯಮಶೀಲತೆ ಮತ್ತು ಇನ್ಕ್ಯುಬೇಶನ್ ಕೇಂದ್ರ, ಉದ್ಯೋಗ ನಿಯೋಜನಾ ಘಟಕ, ವಸತಿ ನಿಲಯ ಹಾಗೂ ಕೌನ್ಸೆಲಿಂಗ್ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಸಂಬಂಧಿತ ಅಧಿಕಾರಿಗಳು ಮತ್ತು ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರೊ. ಶಿವಗಂಗಾ ರುಮ್ಮಾ, ಪ್ರೊ. ಪ್ರಭಾಕರನ್, ಪ್ರೊ. ಪಾಂಡಾ ಹಾಗೂ ಪ್ರೊ. ಸಂದೀಪ್ ಸೇರಿದಂತೆ ಅನೇಕ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಡಾ. ಶ್ರೀಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಂದೇ ಮಾತರಂ ಗಾಯನದೊಂದಿಗೆ ಆರಂಭವಾದ ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಸಮಾಪ್ತಿಯಾಯಿತು.